ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆಯನ್ನು ಹತ್ತಿಕ್ಕಿ, 76 ಜನರ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ಶನಿವಾರ ಬಂಧನಕ್ಕೊಳಗಾಗಿರುವ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಭಾನುವಾರ ಕಠ್ಮಂಡು ಜಿಲ್ಲಾ ನ್ಯಾಯಾಲಯ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಮಧ್ಯೆ ಓಲಿ ಬಂಧನ ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಮುಂದುವರೆದಿವೆ.
ಕಳೆದ ವರ್ಷ ಸೆಪ್ಟೆಂಬರ್ 8 ಮತ್ತು 9 ರಂದು ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ ಆರೋಪದ ಮೇಲೆ ಓಲಿ ಮತ್ತು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಶನಿವಾರ ಬಂಧಿಸಲಾಗಿತ್ತು.
ಹೊಸದಾಗಿ ರಚನೆಯಾದ ಬಾಲೇಂದ್ರ ಶಾ ಸರ್ಕಾರವು ತನ್ನ ಮೊದಲ ಸಂಪುಟ ಸಭೆಯಲ್ಲಿ ಝೆನ್ ಜಿ ಪ್ರತಿಭಟನೆ ಕುರಿತ ತನಿಖಾ ಆಯೋಗದ ವರದಿಯನ್ನು ಜಾರಿಗೆ ತರಲು ನಿರ್ಧರಿಸಿದ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.
ಕೊಲೆ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಕುರಿತು ಹೆಚ್ಚಿನ ತನಿಖೆ ನಡೆಸಲು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರಿ ಲೇಖಕ್ ಅವರನ್ನು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.
ಆದಾಗ್ಯೂ, ಮಾಜಿ ಪ್ರಧಾನಿ ಓಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಜಿಲ್ಲಾ ನ್ಯಾಯಾಲಯಕ್ಕೆ ವರ್ಚುವಲ್ ಮೂಲಕ ಹಾಜರಾಗಿದ್ದರು ಎಂದು ಜಿಲ್ಲಾ ನ್ಯಾಯಾಲಯದ ಮಾಹಿತಿ ಅಧಿಕಾರಿ ದೀಪಕ್ ಕುಮಾರ್ ಶ್ರೇಷ್ಠ ತಿಳಿಸಿದ್ದಾರೆ.
ಬಂಧನದ ನಂತರ ಶನಿವಾರ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ, ಓಲಿ ಪ್ರಸ್ತುತ ಕಠ್ಮಂಡುವಿನ ಮಹಾರಾಜ್ಗುಂಜ್ನಲ್ಲಿರುವ ತ್ರಿಭುವನ್ ವಿಶ್ವವಿದ್ಯಾಲಯ ಬೋಧನಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಐದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.