ಢಾಕಾ: ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ.
ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣದ ಕುರಿತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
35 ವರ್ಷದ ನರೇಂದ್ರ ಧಾರ್ ಅವರು ಹರ್ಯಾಣ ಮೂಲದವರಾಗಿದ್ದು, ಚಟ್ಟೋಗ್ರಾಮಿನ ಖುಲ್ಶಿ ಪ್ರದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
Chattogram ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ ತಮ್ಮ ಕೊಠಡಿಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಮಿಷನ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಅವರ ಮೃತದೇಹವನ್ನು ಕಚೇರಿ ಆವರಣದಿಂದ ಹೊರತೆಗೆದು ಚಟ್ಟೋಗ್ರಾಮ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು ಎಂದು ತಿಳಿದುಬಂದಿದೆ.
ಪೋಲೀಸರ ಪ್ರಕಾರ, ಮರಣೋತ್ತರ ಪರೀಕ್ಷೆಯ ಬಳಿಕ ಅಸಹಜ ಸಾವು ಪ್ರಕರಣ ದಾಖಲಿಸಿ, ಸಂಪೂರ್ಣ ತನಿಖೆ ಆರಂಭಿಸಲಾಗುತ್ತದೆ. ಇಲ್ಲಿಯವರೆಗೆ ಸಾವಿನ ನಿಖರ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.
ಸರ್ಕಾರಿ ಮೂಲಗಳ ಪ್ರಕಾರ, ಬಾಂಗ್ಲಾದೇಶದಲ್ಲಿ ಭಾರತದ ಹೈಕಮಿಷನ್ ಅಧಿಕಾರಿಗಳು ಮೃತ ಅಧಿಕಾರಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮೃತದೇಹವನ್ನು ಭಾರತೀಯ ಮಿಷನ್ಗೆ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.