ಹಿಂದೂ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನಮಾನ. ಎಲ್ಲಾ ಶುಭ-ಅಶುಭ ಕಾರ್ಯಗಳಿಗೂ ತುಳಸಿ ಎಲೆ ಬೇಕೇ ಬೇಕು. ಸಂಸ್ಕೃತ ಭಾಷೆಯಲ್ಲಿ ಇದರ ಅರ್ಥ ತುಲನ ನಸ್ತಿ ಅಂದರೆ ಗುಣದಲ್ಲಿ ತುಲನೆ ಮಾಡಲು ಸಾಧ್ಯವಾಗದಿರುವ ಗಿಡವೇ ತುಳಸಿ. ಆದುದರಿಂದ ಹಿಂದೂ ಧರ್ಮೀಯರು ದೇವರಂತೆಯೇ ತುಳಸಿ ಗಿಡಕ್ಕೂ ನಿತ್ಯ ಪೂಜೆ ಮಾಡುತ್ತಾರೆ.
ತುಳಸಿ ವಿವಾಹ: ಭಕ್ತಿಯಿಂದ ದೀಪ, ಊದುಬತ್ತಿ ಹಚ್ಚಿ ತುಳಸಿ ಗಿಡಕ್ಕೆ ಪೂಜೆ ಮಾಡುವುದಲ್ಲದೆ ಮದುವೆ ಮಾಡುವ ಆಚರಣೆಯೂ ನಮ್ಮಲ್ಲಿದೆ. ತುಳಸಿಯನ್ನು ಹಿಂದೂ ಧರ್ಮದಲ್ಲಿ ಮಹಾವಿಷ್ಣುವಿನ ಮಡದಿಯೆಂದೂ ಅವರಿಬ್ಬರಿಗೆ ನಡೆಯುವ ವಿವಾಹವನ್ನು ತುಳಸಿ ವಿವಾಹ ಎಂದು ಕರೆಯುತ್ತಾರೆ. ತುಳಸಿ ಗಿಡಕ್ಕೆ ವಿವಾಹವೆಂದರೆ ಮಳೆಗಾಲ ಮುಗಿದು ಚಳಿಗಾಲದಲ್ಲಿ ಹಿಂದೂ ಮದುವೆಗಳು ಆರಂಭವಾಗುವ ಸಮಯವೆಂದರ್ಥ. ಪ್ರತಿವರ್ಷ ದೀಪಾವಳಿ ಹಬ್ಬ ಮುಗಿದ ಬಳಿಕ ಹಿಂದೂಗಳು ಆಚರಿಸುವ ಹಬ್ಬವೇ ತುಳಸೀಪೂಜೆ. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ. ಇದನ್ನು ಕಿರು ದೀಪಾವಳಿ ಎಂದೂ ಸಹ ಕರೆಯುವರು.
ತುಳಸಿ ವಿವಾಹದ ಹಿಂದೆ ದೀರ್ಘವಾದ ಪುರಾಣ ಕಥೆಯಿದೆ. ಹಿಂದೂ ಪುರಾಣದ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿಯಾಗಿ ಗಿಡದ ರೂಪ ಪಡೆದಿರುವುದು. ಈಕೆ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿರುತ್ತಾಳೆ. ಅವಳಿಗೆ ಮಹಾವಿಷ್ಣುವಿನ ಮೇಲೆ ವಿಶೇಷ ಭಕ್ತಿ. ಇದು ಜಲಂಧರನಿಗೆ ಇಷ್ಟವಿರುವುದಿಲ್ಲ. ಆತ ದೇವತೆಗಳಿಗೆ ಉಪಟಳ ನೀಡುತ್ತಿರುತ್ತಾನೆ. ಆಗ ಶಿವನು ಏನು ಮಾಡುವುದೆಂದು ವಿಷ್ಣುವಿನ ಮೊರೆ ಹೋಗುತ್ತಾನೆ. ಆಗ ವಿಷ್ಣುವು ಜಲಂಧರನ ರೂಪ ತಾಳಿ ವೃಂದಾಳ ಬಳಿಗೆ ಬಂದು ಮೋಹಿಸಿ ಆಕೆಯ ಪಾವಿತ್ರ್ಯತೆಗೆ ಧಕ್ಕೆ ತರುತ್ತಾನೆ. ಈ ಸಂದರ್ಭದಲ್ಲಿ ಶಿವನು ಜಲಂಧರ ರಾಜನನ್ನು ಸಂಹರಿಸುತ್ತಾನೆ.
ಇತ್ತ ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ವಿಷ್ಣುವಿಗೆ ವೃಂದಾ ಕಪ್ಪು ಕಲ್ಲಾಗಿ ಹೋಗು ಎಂದು ಶಾಪ ನೀಡುವಳಲ್ಲದೆ ನಿನಗೆ ಪತ್ನಿಯ ವಿರಹವುಂಟಾಗಲಿ ಎಂದು ಆಶಿಸುತ್ತಾಳೆ. ಇದರಿಂದ ರಾಮಾಯಣದಲ್ಲಿ ವಿಷ್ಣುವಿನ ಅವತಾರ ರಾಮನಿಗೆ ಸೀತೆಯು ಕಾಡಿನಲ್ಲಿ ಕೆಲವು ವರ್ಷಗಳ ಕಾಲ ದೂರವಾಗುತ್ತಾಳೆ. ತನ್ನ ಚಾರಿತ್ರ್ಯಕ್ಕೆ ಧಕ್ಕೆಯುಂಟಾದುದರಿಂದ ವೃಂದಾ ಪತಿಯ ಚಿತೆಗೆ ಹಾರಿ ಸಾವಿಗೀಡಾಗುತ್ತಾಳೆ. ವಿಷ್ಣುವು ಆಕೆಯ ಆತ್ಮವನ್ನು ತುಳಸಿಗಿಡವಾಗಿ ಪರಿವರ್ತಿಸಿ ಮುಂದಿನ ಜನ್ಮದಲ್ಲಿ ಸಾಲಿಗ್ರಾಮವಾಗಿ ಪ್ರಭೋದಿನಿ ಏಕಾದಶಿಯ ದಿನ ತುಳಸಿಯನ್ನು ಮದುವೆಯಾಗುತ್ತಾನೆ ಎಂಬ ಕಥೆಯಿದೆ. ಇದರ ಸಂಕೇತವೇ ವಿಷ್ಣು-ತುಳಸಿ ವಿವಾಹ.
ಇನ್ನೊಂದು ಪುರಾಣದ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದ ಬಾಷ್ಪಗಳು ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ ಇಲ್ಲವಾದ್ದರಿಂದ ತುಳಸಿ ಎಂದು ಹೆಸರಿಟ್ಟು ಲಕ್ಷ್ಮಿಯೊಂದಿಗೆ ತುಳಸಿಯನ್ನು ಕೂಡ ವಿಷ್ಣು ಮದುವೆಯಾದನು.
ಆಚರಣೆ ವಿಧಾನ: ಈ ದಿನದಂದು ತುಳಸಿ ಕಟ್ಟೆಯನ್ನು ರಂಗೋಲಿ, ಹೂವು ಹಾಗೂ ಮಾವಿನ ಎಲೆಗಳಿಂದ ಅಲಂಕರಿಸಿ ವಿಷ್ಣುವಿನ ಅವತಾರ ಕೃಷ್ಣನ ಮೂರ್ತಿಯನ್ನಿರಿಸಿ ಪೂಜಿಸಲಾಗುತ್ತದೆ. ದೀಪಾವಳಿ ಸಮಯದಲ್ಲಿ ಇದ್ದ ಸಂಭ್ರಮವೇ ಈ ತುಳಸಿ ವಿವಾಹ ಸಮಯದಲ್ಲಿಯೂ ಇರುತ್ತದೆ. ತುಳಸಿ ಗಿಡದೊಂದಿಗೆ ಬೆಟ್ಟದ ನೆಲ್ಲಿಕಾಯಿ ಗಿಡವನ್ನು ನೆಟ್ಟು ಪೂಜಿಸುವ ರೂಢಿ ಇದೆ. ದೀಪದಿಂದ ಗಿಡದ ಸುತ್ತ ಅಲಂಕರಿಸಲಾಗುತ್ತದೆ.
ತುಳಸಿ ಗಿಡದ ವಿವಾಹವು ಹಿಂದೂ ಪದ್ದತಿಯ ಮದುವೆಯ ಸಂಕೇತವಾಗಿರುವುದರಿಂದ ಹಿಂದೂಗಳ ಮನೆಗಳಲ್ಲಿ, ದೇವಾಲಯಗಳಲ್ಲಿ ಈ ಆಚರಣೆ ನಡೆಸಲಾಗುತ್ತದೆ. ಆ ದಿನ ಪೂಜೆಯಲ್ಲಿ ಪಾಲ್ಗೊಳ್ಳುವವರು ಉಪವಾಸ ಕೈಗೊಳ್ಳುತ್ತಾರೆ. ತುಳಸಿ ಗಿಡದ ಸುತ್ತಲೂ ಮದುವೆ ಮಂಟಪ ನಿರ್ಮಿಸುತ್ತಾರೆ. ಇದಕ್ಕೆ ತುಳಸಿ ಬಂದಾವನವೆಂದು ಹೆಸರು. ವೃಂದಾಳ ಆತ್ಮವು ರಾತ್ರಿಯಿಡೀ ಇದ್ದು ಮರುದಿನ ಬೆಳಿಗ್ಗೆ ಹೊರಟುಹೋಗುತ್ತದೆ ಎಂಬ ನಂಬಿಕೆಯಿದೆ. ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ.
ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. ವಿಷ್ಣುವಿನ ಭಾವಚಿತ್ರ ಹಾಗೂ ತುಳಸಿ ಗಿಡಕ್ಕೆ ಹತ್ತಿಯಿಂದ ತಯಾರಿಸಿದ ಮಾಲೆಯನ್ನು ತೊಡಿಸಿ ಮದುವೆಯ ಶಾಸ್ತ್ರ ಮಾಡಲಾಗುತ್ತದೆ. ಹಿಂದೂ ವಿವಾಹ ಪದ್ಧತಿಯಲ್ಲಿ ನಡೆಯುವ ಆಚರಣೆಯಂತೆಯೇ ವಿಷ್ಣು-ತುಳಸಿ ವಿವಾಹವನ್ನು ಭಕ್ತರು ಆಚರಿಸುತ್ತಾರೆ. ಆಚರಣೆ ವಿಧಾನ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.
ಮದುವೆ ಮಾಡುವವರು, ಕಾರ್ಯಕ್ರಮಕ್ಕೆ ಬಂದವರು ಅಲ್ಲಿ ಸೇರಿರುತ್ತಾರೆ. ಮದುವೆಯನ್ನು ನೋಡಿ ಬಾಯ್ತುಂಬ ಹರಸುತ್ತಾರೆ. ವಧೂ-ವರರಿಗೆ ಉಡುಗೊರೆ ನೀಡುವ ಸಂಕೇತವಾಗಿ ಪೂಜೆ ಏರ್ಪಡಿಸಿದ ಮನೆಯ ಹುಡುಗಿಯರಿಗೆ, ಮಹಿಳೆಯರಿಗೆ, ಪುರುಷರಿಗೆ ಅತಿಥಿಗಳು ಉಡುಗೊರೆ ಕೊಡುತ್ತಾರೆ. ನಂತರ ಭೋಜನ ಮುಗಿಸಿ ಮನೆಗೆ ತೆರಳುತ್ತಾರೆ. ಅನೇಕ ಸಂಪ್ರದಾಯ, ಆಚರಣೆಗಳನ್ನು ಹೊಂದಿರುತ್ತದೆ.
ತುಳಸಿ ಗಿಡವು ಐಶ್ವರ್ಯವನ್ನು, ಸಂತಸವನ್ನು ತರುತ್ತದಲ್ಲದೆ ಅಕಾಲಿಕ ಮರಣವನ್ನು ತಡೆಯುತ್ತದೆಂದು ನಂಬಿಕೆಯಿದೆ. ತುಳಸಿ ಆಯುರ್ವೇದದಲ್ಲಿ ಪ್ರಮುಖ ಔಷಧ ಸಸ್ಯವೂ ಹೌದು. ತುಳಸಿ ದರ್ಶನದಿಂದ ಪಾಪ ಪರಿಹಾರ, ಸ್ಪರ್ಶದಿಂದ ಪವಿತ್ರತೆ, ರೋಗ ಪರಿಹಾರ, ಪ್ರೋಕ್ಷಿಸಿದರೆ ಆಯಸ್ಸು ವೃದ್ಧಿ, ಸಸಿಯನ್ನು ನೆಡುವುದರಿಂದ ಶ್ರೀಕೃಷ್ಣನ ಸಾನ್ನಿಧ್ಯ ಲಭ್ಯ, ಅರ್ಚಿಸಿ ಪೂಜಿಸಿದರೆ ಮೋಕ್ಷ ಸಿಗುತ್ತದೆ ಎಂದು ಸನಾತನ ಧರ್ಮ ಹೇಳುತ್ತದೆ. ಹೀಗಾಗಿ ಎಲ್ಲರ ಮನೆಯಲ್ಲೂ ತುಳಸಿ ಗಿಡವನ್ನು ಬೆಳೆಸುತ್ತಾರೆ. ಅದಕ್ಕೆ ದಿನಾ ಪೂಜೆ, ಪ್ರದಕ್ಷಿಣೆ, ನಮಸ್ಕಾರ ಮಾಡುತ್ತಾರೆ.
- ಸುಮನಾ ಉಪಾಧ್ಯಾಯ
ಬೆಂಗಳೂರು
Advertisement