ಭಾರತದ ಮುಕುಟ ಕಾಶ್ಮೀರ, ಕಾಶ್ಮೀರವಿಲ್ಲದ ಭಾರತ ಊಹೆಗೂ ನಿಲುಕದ್ದು. ಕಾಶ್ಮೀರ ಭಾರತೀಯ ಪರಂಪರೆಯ ಪ್ರತಿನಿಧಿಯೆಂದರೂ ತಪ್ಪಾಗಲಾರದು. ಕಾಶ್ಮೀರದಲ್ಲಿ ಭಾರತದ ಐತಿಹ್ಯ, ಇತಿಹಾಸಕ್ಕೆ ಸಂಬಂಧಿಸಿದಂತಹ ದೇವಾಲಯಗಳಿವೆ. ಇವುಗಳಲ್ಲಿ ಶಾರದಾಪೀಠ(ಸರ್ವಜ್ಞ ಪೀಠ) ದೇವಾಲಯವೂ ಒಂದು ಆದಿ ಶಂಕರಾಚಾರ್ಯರು ಅದ್ವೈತ ತತ್ವವನ್ನು ಪ್ರಚಾರ ಮಾಡುತ್ತಾ, ಪುಣ್ಯ ಕ್ಷೇತ್ರಗಳಾದ ಗಿರಿನಾರ, ಸೋಮನಾಥ, ಪ್ರಭಾಸ ಕ್ಷೇತ್ರಗಳನ್ನು ಸಂದರ್ಶಿಸಿ ಅಲ್ಲಿಯ ಪಂಡಿತರನ್ನು ವಾದದಲ್ಲಿ ಗೆದ್ದು ಅದ್ವೈತ ತತ್ವವನ್ನು ಪ್ರತಿಪಾದಿಸಿದ್ದರು. ಅಲ್ಲಿಂದ ದ್ವಾರಕೆಗೆ ಬಂದು ಅಲ್ಲಿ ಪ್ರಸಿದ್ಧರಾದ ಬೇಧಾಬೇಧ ಪಂಡಿತರಾದ ಭಾಸ್ಕರರನ್ನು ವಾದದಲ್ಲಿ ಸೋಲಿಸಿದರು. ದ್ವಾರಕೆಯ ಪಂಡಿತರೆಲ್ಲಾ ಅದ್ವೈತ ತತ್ವವನ್ನು ಒಪ್ಪಿಕೊಂಡರು. ಬಾಹ್ಲೀಕದಲ್ಲಿ ಜೈನಪಂಡಿತರನ್ನು ವಾದದಲ್ಲಿ ಹಿಮ್ಮಟ್ಟಿಸಿದರು. ಅಲ್ಲಿಂದ ಕಾಂಬೋಜಕ್ಕೆ [ಉತ್ತರಕಾಶ್ಮೀರ] ದಾರದ [ದಬೀಸ್ಥಾನ್] ಕ್ಕೆ ಬಂದು ಅಲ್ಲಿಯ ಸಂನ್ಯಾಸಿಗಳನ್ನೂ ಪಂಡಿತರನ್ನೂ ವಾದದಲ್ಲಿ ಸೋಲಿಸಿದರು ಎತ್ತರದ ಶಿಖರ ,ಕಣಿವೆಗಳನ್ನು ದಾಟಿ ಕಾಶ್ಮಿರ, ನಂತರ ಕಾಮರೂಪಕ್ಕೆ ಬಂದು ಅಲ್ಲಿ ನವಗುಪ್ತನೆಂಬ ತಾಂತ್ರಿಕರನ್ನು ಎದುರಿಸಿದರು.