ಹಾಸನಕ್ಕೆ ಸಿಂಹಾಸನಪುರಿ ಎಂಬ ಹೆಸರು ಇದ್ದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟರೆ, ಮಹಾಭಾರತದ ಕಾಲಘಟ್ಟದ ಪುಟಗಳು ತೆರೆದುಕೊಳ್ಳುತ್ತವೆ. ಮಹಾಭಾರತದ ಅರ್ಜುನನ ಮೊಮ್ಮಗ ಜನಮೇಜಯ ಶಾಪಗ್ರಸ್ಥನಾಗಿದ್ದ ಕಾಲದಲ್ಲಿ ಇಲ್ಲಿ ನೆಲೆಸಿದ್ದ. ಆಗ ಈ ಸ್ಥಳಕ್ಕೆ ಸಿಂಹಾಸನಪುರಿ ಎಂಬ ಹೆಸರಿತ್ತು. ನಂತರ ಸಿಂಹಾಸನಪುರ ಆಡು ಮಾತಿನಿಂದ ಹಾಸನ ಎಂದಾಗಿದೆ ಎಂದು ನಂಬಲಾಗಿದೆ. ಇನ್ನು ಪುರಾಣಗಳಲ್ಲೂ ಸಿಂಹಾಸನಪುರಿ ಅಂದರೆ ಹಾಸನದ ಬಗ್ಗೆ ಉಲ್ಲೇಖಗಳಿದ್ದು ಸಪ್ತಮಾತೃಕೆಯರಾದ ವೈಷ್ಣವಿ, ಇಂದ್ರಾಣಿ, ಮಹೇಶ್ವರಿ, ಕುಮಾರಿ, ಬ್ರಾಹ್ಮೀದೇವಿ, ವರಾಹಿ ಮತ್ತು ಚಾಮುಂಡಿ ವಾರಣಾಸಿ ಕಡೆಯಿಂದ ದಕ್ಷಿಣದ ಕಡೆಗೆ ವಿಹಾರಕ್ಕೆ ಬಂದಾಗ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ನೆಲೆಸಲು ನಿರ್ಧರಿಸಿದ ಕ್ಷೇತ್ರವೇ ಸಿಂಹಾಸನಪುರಿ ಅಂದರೆ ಹಾಸನ ಎಂದು ವರ್ಣಿಸಲಾಗಿದೆ. ಅವರುಗಳಲ್ಲಿ ವೈಷ್ಣವಿ, ಕುಮಾರಿ, ಮಹೇಶ್ವರಿಯರು ಹಾಸನಾಂಬ ದೇವಾಲಯದಲ್ಲಿ ಹುತ್ತದ ರೂಪದಲ್ಲಿ ಹಾಗು ಬ್ರಾಹ್ಮೀದೇವಿಯು ಕೆಂಚಮ್ಮನ ಹೊಸಕೋಟೆಯಲ್ಲಿ ನೆಲೆಸಿದಳು. ಇನ್ನುಳಿದ ದೇವತೆಯರಾದ ಚಾಮುಂಡಿ, ವರಾಹಿ, ಇಂದ್ರಾಣಿ ನಗರ ಮಧ್ಯ ಭಾಗದ ದೇವಿಗೆರೆಯ ಬಳಿನೆಲೆಸಿದರು ಎನ್ನಲಾಗಿದೆ.