ಅತ್ರಿ ಮಹರ್ಷಿಗಳು ತ್ರಿಮೂರ್ತಿಗಳ ಕುರಿತು ತಪಸ್ಸು ಮಾಡಿ ತ್ರಿಮೂರ್ತಿಗಳ ಅಂಶವಿರುವ ಮಗ ಹುಟ್ಟಿ ಬರಬೇಕೆಂದು ಪ್ರಾರ್ಥನೆ ಮಾಡಿದ್ದರು. ಹಾಗಾಗಿಯೇ ಅತ್ರಿ ಮಹರ್ಷಿಗಳಿಗೆ ತ್ರಿಮೂರ್ತಿಗಳ ಅಂಶವಿರುವ ದತ್ತಾತ್ರೇಯರು ಮಗನಾಗಿ ಜನಿಸಿದರು. ಯಾವುದೇ ತತ್ವವನ್ನು ಸ್ಪಷ್ಟವಾಗಿ ಅರಿಯಬೇಕಾದರೆ, ಅಥವಾ ಆ ತತ್ವದ ಮೇಲೆ ಹಿಡಿತ ಸಾಧಿಸಬೇಕಾದರೆ ಗುರುವಿನ ಪಾತ್ರ ಅತ್ಯಂತ ಮುಖ್ಯವಾದದ್ದು. ಆದ್ದರಿಂದಲೇ ಪ್ರತ್ಯಕ್ಷ ದೈವ ಹಾಗೂ ಎಲ್ಲಕ್ಕೂ ಮಿಗಿಲಾದ ತತ್ವರೂಪನಾದ ಗುರುವನ್ನು ಆಶ್ರಯಿಸಬೇಕು ಎಂಬ ನಂಬಿಕೆ ಇದೆ. ಅಷ್ಟೇ ಅಲ್ಲದೇ, ವ್ಯಕ್ತಿಯೊಬ್ಬ ತನ್ನ ಜೀವನದಲ್ಲಿ ಸಾಧನೆ ಮಾಡಬೇಕಾದರೆ ಅದಕ್ಕೆ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಅಂತಹ ಶ್ರೇಷ್ಠ ಗುರುಗಳು ತ್ರಿಮೂರ್ತಿಗಳ ಸ್ವರೂಪರಾದ ದತ್ತಾತ್ರೇಯರು.