ಕಾರ್ತಿಕ ಮಾಸ ವ್ರತಾಚರಣೆಯಿಂದ ಹಿಂದಿನ ಕರ್ಮಗಳನ್ನು ಕಳೆದುಕೊಳ್ಳಲು ಸಾಧ್ಯವಿದೆ ಎಂದು ಹೇಳಲಾಗಿದೆ. ಕಾರ್ತಿಕ ಮಾಸದಲ್ಲಿ ಸೂರ್ಯೋದಯ ಹಾಗೂ ಸೂರ್ಯಾಸ್ತದ ವೇಳೆಯಲ್ಲಿ ತುಪ್ಪದ ದೀಪ ಹಚ್ಚಿದರೆ ಅಭ್ಯುದಯ, ಸಂಪತ್ತು, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯೂ ಇದ್ದು, ಲೌಕಿಕ ಬಯಕೆಗಳಿಂದ ಮುಕ್ತಿ ಪಡೆಯಲು ನೆರವಾಗುತ್ತದೆ ಎಂದೂ ಪುರಾಣಗಳಲ್ಲಿ ಉಲ್ಲೇಖವಾಗಿದೆ. ಕಾರ್ತಿಕ ಮಾಸದಲ್ಲಿ ಸಾಮಾನ್ಯವಾಗಿ ತುಳಸಿ ಗಿಡದ ಎದುರು ದೀಪಗಳನ್ನಿಟ್ಟು ಪೂಜೆ ಮಾಡುವ ಸಂಪ್ರದಾಯದ ಆಚರಣೆಯ ಹಿಂದೆ ಒಂದು ಪೌರಾಣಿಕ ಕಥೆ ಚಾಲ್ತಿಯಲ್ಲಿದೆ. ಅದೇನೆಂದರೆ, ಕ್ಷೀರಸಾಗರವನ್ನು ಮಥಿಸಿದಾಗ ಆವಿರ್ಭಾವಗೊಂಡ ಲಕ್ಷ್ಮಿಯ ಸಹೋದರಿ ತುಳಸಿ. ತುಳಸಿ ವಿಷ್ಣುವನ್ನು ವರಿಸಬೇಕೆಂಬ ಇಚ್ಛೆ ಹೊಂದಿರುತ್ತಾಳೆ. ಆದರೆ ಶಾಪಕ್ಕೆ ಗುರಿಯಾಗಿ ಗಿಡವಾಗಿ ಜನ್ಮ ಪಡೆಯುತ್ತಾಳೆ. ಆದರೆ ವಿಷ್ಣು ತುಳಸಿಯ ಇಚ್ಛೆಯನ್ನು ಮನ್ನಿಸಿ, ತಾನು ಸಾಲಿಗ್ರಾಮದ ರೂಪದಲ್ಲಿರಬೇಕಾದರೆ ತುಳಸಿ ತನಗೆ ಅತ್ಯಂತ ಪ್ರಿಯವಾದದ್ದಾಗಿರುತ್ತದೆ ಎಂಬ ವರ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಸಾಲಿಗ್ರಾಮಕ್ಕೆ ತುಳಸಿ ಅರ್ಪಿಸುವುದು ಶ್ರೇಷ್ಠವಾಗಿದ್ದು, ಕಾರ್ತಿಕ ಮಾಸದ ಶುಕ್ಲ ದ್ವಾದಶಿಯ ದಿನದಂದು ತುಳಸಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.