ಬೆಂಗಳೂರು: ಕೇಂದ್ರ ಬಜೆಟ್ ಯಾವುದೇ ದುರದೃಷ್ಟಿ ಇಲ್ಲದ ಮತ್ತು ಗೊತ್ತು ಗುರಿ ಇಲ್ಲದ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ರೈತರ ಸಾಲ ಮನ್ನಾ ಸೇರಿದಂತೆ ಕೇಂದ್ರ ಬಜೆಟ್ ಬಗ್ಗೆ ನಾವು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ಅರುಣ್ ಜೇಟ್ಲಿ ರಾಜ್ಯದ ಜನತೆ ನಿರಾಶೆ ಮಾಡಿದ್ದಾರೆ ಎಂದರು.
ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಇದು ಅಭಿವೃದ್ಧಿ ಆಧಾರಿತ ಬಜೆಟ್ ಅಲ್ಲ. ಅವರು ಆರೋಗ್ಯ ವಿಮೆ ಯೋಜನೆ ಸೇರಿದಂತೆ ಹಲವು ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ. ಆದರೆ ಅದಕ್ಕೆ ಯಾವುದೇ ಹಣ ಹಂಚಿಕೆ ಮಾಡಿಲ್ಲ. ಇದೇ ರೀತಿ ಕಳೆದ ವರ್ಷ ಘೋಷಿಸಿದ ಯೋಜನೆ ಇನ್ನೂ ಜಾರಿಯಾಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಜೆಟ್ ರಾಜ್ಯದ ಜನತೆಗೆ ತೀವ್ರ ನಿರಾಶೆ ಮೂಡಿಸಿದೆ. ರಾಜ್ಯಕ್ಕೆ ವಿಶೇಷವಾದ ಯಾವುದೇ ಯೋಜನೆ ಘೋಷಿಸಿಲ್ಲ. ಅವರು ಕೇವಲ ಮಾತನಾಡುತ್ತಾರೆ. ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಕನಿಷ್ಠ ಬೆಂಬಲ ಬೆಲೆಗಾಗಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.