ಕರ್ನಾಟಕ ಬಜೆಟ್ 2019: ಉನ್ನತ ಶಿಕ್ಷಣ ಕ್ಷೇತ್ರದ ಡಿಜಿಟಲೀಕರಣಕ್ಕೆ ಹೊಸ ಯೋಜನೆಗಳು

ಉನ್ನತ ಶಿಕ್ಷಣ ಕ್ಷೇತ್ರವನ್ನು ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರವನ್ನು ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಆಧಾರ್‌ ಸಂಖ್ಯೆ ಆಧಾರಿತ ಡಿಜಿಟಲ್‌ ಅಂಕಪಟ್ಟಿ ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ ಮೂಲಕವೇ ವಿತರಣೆ ಹಾಗೂ ದೃಢೀಕರಣ ಮಾಡುವ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 2 ಕೋಟಿ ರೂ. ಅನುದಾನ ಘೋಷಿಸಿದೆ.

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ವರ್ಷ ನಡೆಸುವ  ಸಿಇಟಿ ಪರೀಕ್ಷೆಯ ಗೊಂದಲಗಳನ್ನು ನಿವಾರಿಸಲು ಇನ್ನು ಮುಂದೆ ಆನ್‌ಲೈನ್‌ ಮೂಲಕವೇ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ ಭಾಷಣದಲ್ಲಿ ಪ್ರಕಟಿಸಿದ್ದಾರೆ.

ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾನಿಲಯದಲ್ಲಿ 'ಹೊಸ ಪೀಳಿಗೆ ಉನ್ನತ ಶಿಕ್ಷಣ' ಕಾರ್ಯಕ್ರಮದ ಮೂಲಕ ಉನ್ನತ ಶಿಕ್ಷಣದಲ್ಲಿ ಹೊಸ ಕಲಿಕೆಯ ವಿಧಾನಗಳ ಅಳವಡಿಕೆಗೆ ಮುಖ್ಯಮಂತ್ರಿಗಳ ನೇತೃತ್ವದ ಸಮಿತಿ ರಚಿಸಿ ಅಧ್ಯಯನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಸನದಲ್ಲಿ ತಾಂತ್ರಿಕ ಕಾಲೇಜು
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ಮರು ವಿಂಗಡನೆ ಮಾಡಿ, ಹಾಸನದಲ್ಲಿ ಒಂದು ಹೊಸ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ನಿಡಲು ತರಬೇತಿ ಕೇಂದ್ರ ಪ್ರಾರಂಭಿಸಲಾಗುವದು, ಉನ್ನತ ಶಿಕ್ಷಣ ಗುಣಮಟ್ಟ ವೃದ್ಧಿಗೆ ಎಲ್ಲ ಕಾಲೇಜುಗಳ ಅಧ್ಯಾಪಕರಿಗೆ ಮುಂದಿನ 3 ವರ್ಷಗಳಲ್ಲಿ ಅಗತ್ಯ ಬೋಧನಾ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಬೋಧಕರ ವೇತನ ಪರಿಷ್ಕರಣೆ
ಏಳನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಅನುಸಾರ ಸರ್ಕಾರಿ, ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ತತ್ಸಮಾನ ವೃಂದಗಳ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲಾಗುವುದು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್‌ಗಳಲ್ಲಿ ಪ್ರಯೋಗಾಲಯ, ಕಾರ್ಯಾಗಾರ ಸೌಲಭ್ಯಗಳಿಗೆ  10 ಕೋಟಿ ರೂ. ಅನುದಾನ ಘೋಷಿಸುವುದಾಗಿ ಕುಮಾರಸ್ವಾಮಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com