ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯ ಬಜೆಟ್ 2020ರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಉತ್ತರ ಕರ್ನಾಟಕದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ 500 ಕೋಟಿ ರೂ ಮೀಸಲಿಟ್ಟಿದ್ದಾರೆ.
ಇದಲ್ಲದೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೂ ಸಿಎಂ ಬಿಎಸ್ ವೈ ಅನುದಾನ ಘೋಷಣೆ ಮಾಡಿದ್ದು, ಎತ್ತಿನಹೊಳೆ ಯೋಜನೆಗೆ 1500 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ಅಂತೆಯೇ 2020–21ನೇ ಸಾಲಿನಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚುವರಿಯಾಗಿ ಜಲಸಂಪನ್ಮೂಲ ಇಲಾಖೆಯ ಮೂಲಕ ನೀರಾವರಿ ಒದಗಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ರಾಜ್ಯದ ಪ್ರತೀ ಮನೆಗೆ ಕುಡಿಯುವ ನೀರು ನೀಡುವ ಉದ್ದೇಶದಿಂದ ‘ಮನೆ ಮನೆಗೆ ಗಂಗೆ’ ಯೋಜನೆ ಘೋಷಣೆ ಮಾಡಲಾಗಿದೆ. ಅ್ದರಂತೆ 10 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವಿಜಯಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರು ಯೋಜನೆ ಜಾರಿಗೆ 700 ಕೋಟಿ ರೂ ಅನುದಾನ ಮೀಸಲಿಡಲಾಗಿದೆ ಎಂದು ಬಿಎಸ್ ವೈ ಹೇಳಿದರು.
Advertisement