ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆಯಾಗಿದೆ.
ಬಜೆಟ್ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದ ಬಜೆಟ್ ಮಂಡನೆಯ ವೇಳೆ ಎಲ್ಲವನ್ನೂ ಹೇಳಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಬಜೆಟ್ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ ಎಂದರು.
7ನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ವರದಿ ಜಾರಿಗಾಗಿ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ತಿಳಿಸಿದರು.
ಈಗ 2023-24 ರ ಬಜೆಟ್ ಮಂಡನೆ ಮಾಡಿದ್ದೇನೆ. ಕೋವಿಡ್ ಕಾಲದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿತ್ತು. ಕರ್ನಾಟಕ ಬಜೆಟ್ ಸಮಾನ್ಯ ವರ್ಷಗಳಂತೆ ಹಳಿಗೆ ಬರಲು 5-6 ವರ್ಷಗಳು ಬೇಕು ಎಂದು ಆರ್ಥಿಕ ತಜ್ಞರು ಹೇಳಿದ್ದರು. ಆದರೆ, ಕೇವಲ ಎರಡೇ ವರ್ಷ ದಲ್ಲಿ ಸುಧಾರಣೆ ಆಗಿದೆ. ನಮ್ಮ ಆರ್ಥಿಕ ಕ್ಷಮತೆಯ ಮೇಲೆ ವಿಶ್ವಾಸ ಬಂದಿದೆ ಎಂದು ಹೇಳಿದರು.
Advertisement