ಬೆಂಗಳೂರು: ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಏಳು ಎಂಜಿನಿಯರ್ ಗಳನ್ನು ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳನ್ನಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ, ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್. ಪೇಟೆ, ತಳ್ಕಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕೆಐಟಿ ಗಳಾಗಿ ಉನ್ನತೀಕರಿಸಲು ಗುರುತಿಸಲಾಗಿದೆ ಎಂದರು.
ಪ್ರೊಫೆಸರ್ ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯ ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಈ ಸಮಿತಿಯ ಶಿಫಾರಸ್ಸಿನ ಅನ್ವಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊಫೆಸರ್ ಸಿಎನ್ ಆರ್ ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಹಳ್ಳಿ ಮುತ್ತು ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು ಎಂದರು.
Advertisement