ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಸಿಎಂ ಜತೆ ಪಿರಮಲ್ ಗ್ರೂಪ್ ಅಧ್ಯಕ್ಷರ ಸಭೆ; ರಾಜ್ಯದಲ್ಲಿ ಹೂಡಿಕೆ ಮಾಡಿದರೆ ಎಲ್ಲಾ ರೀತಿಯ ಸಹಕಾರ: ಯಡಿಯೂರಪ್ಪ

ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಳೊಂದಿಗೆ ಇಂದು ಪಿರವಲ್ ಗ್ರೂಪ್ ಅಧ್ಯಕ್ಷ ಆನಂದ್ ಪಿರವಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು.

ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ ಸರ್ಕಾರ ತೆರೆದಿಟ್ಟಿದೆ. ಕೋವಿಡ್ 19 ಸಾಂಕ್ರಾಮಿಕ ಹೊಸ ಸವಾಲುಗಳನ್ನು ತಂದೊಡ್ಡಿದೆ. ಇತ್ತೀಚೆಗೆ ಕರ್ನಾಟಕ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಿದ್ದು, ಸುಸ್ಥಿರ ಮತ್ತು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು.

ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿಗೆ ತರಲು ಇದ್ದ ಅಡೆತಡೆಗಳನ್ನು ನಿವಾರಿಸಿ, ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಕೈಗಾರಿಕೆಗಳ ಸ್ಥಾಪನೆ, ಬೆಳವಣಿಗೆ ಹಾಗೂ ನಿರ್ವಹಣೆಗೆ ಪೂರಕ ವಾತಾವರಣವನ್ನು ರಾಜ್ಯ ಹೊಂದಿದೆ. ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರೆಡೆಗಳಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪೂರಕ ವ್ಯವಸ್ಥೆಗಳನ್ನು ಮಾಡಿದೆ ಎಂದು ಸಿಎಂ ತಿಳಿಸಿದರು.

ಔಷಧ ತಯಾರಿಕಾ ವಲಯದಲ್ಲಿ ಕರ್ನಾಟಕದಲ್ಲಿ ಫಾರ್ಮಾ ರಫ್ತು, ಸಂಶೋಧನೆ ಮತ್ತು ಪ್ಯಾಕೇಜಿಂಗ್ ನಲ್ಲಿ ಕರ್ನಾಟಕದಲ್ಲಿ ಅತ್ಯುತ್ತಮ ವಾತಾವರಣವಿದೆ. ಬಯೋಕಾನ್, ಜೆನೆಕಾ, ಸೇರಿದಂತೆ ಅನೇಕ ಪ್ರಖ್ಯಾತ ಸಂಸ್ಥೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಸಮಸ್ಯೆ ಇದ್ದರೂ ಅದನ್ನು ತಕ್ಷಣವೇ ಬಗೆಹರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಪಿರಮಲ್ ಗ್ರೂಪ್ ಅಧ್ಯಕ್ಷ ಆನಂದ್ ಪಿರಮಲ್ ಮಾತನಾಡಿ, ತಮ್ಮ ಸಂಸ್ಥೆಗೆ ಔಷಧ ತಯಾರಿಕೆಯಲ್ಲಿ ಅಪಾರ ಅನುಭವವಿದೆ, ಜಾಗತಿಕ ಮಟ್ಟದಲ್ಲಿ ಶಾಖೆಗಳನ್ನು ಹೊಂದಿದೆ. ಔಷಧ ತಯಾರಿಕೆಯನ್ನು ಕರ್ನಾಟಕದಲ್ಲಿ ವಿಸ್ತರಿಸಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಒಂದೇ ದಿನದಲ್ಲಿ ಅಗತ್ಯ ಅನುಮೋದನೆಗಳನ್ನು ನೀಡಲಾಗುತ್ತಿರುವುದನ್ನು ತಿಳಿದು ಹೂಡಿಕೆಗೆ ಹಾಗೂ ಪಾಲುದಾರಿಕೆಗೆ ಸಂಸ್ಥೆ ಉತ್ಸುಕವಾಗಿದೆ ಎಂದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ಉದ್ಯಮ ಸ್ನೇಹಿ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ಕೈಗಾರಿಕಾ ಅಭಿವೃದ್ಧಿಗೆ ಎಲ್ಲಾ ಹಂತಗಳಲ್ಲಿಯೂ ಹೂಡಿಕೆಗೆ ಇರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com