ಬೆಂಗಳೂರು: ಮಂಗಳವಾರ ಮುಂಜಾನೆ ಸಾವನ್ನಪ್ಪಿದ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಅನಾರೋಗ್ಯದಿಂದ ಸಾವನ್ನಪ್ಪಿಲ್ಲ, ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮಂಗಳವಾರ ಮುಂಜಾನೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಟ ಧ್ರುವ ಸಾವಿಗೀಡಾಗಿದ್ದು, ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ ನಟ ಧ್ರುವ ಅನಾರೋಗ್ಯದಿಂದ ಸಾವನ್ನಪ್ಪಿಲ್ಲ. ಬದಲಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತಃ ಅವರ ತಂದೆ ಸುರೇಶ್ ಶರ್ಮಾ ಅವರು ಇಂದು ಬೆಳಗ್ಗೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನಲ್ಲಿ ಸಾಲಭಾದೆಯಿಂದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹ, ತಮ್ಮ ಒಡೆತನದ ಕಂಪೆನಿಯಲ್ಲಿ ನಷ್ಟ ಮತ್ತು ಸಾಲಬಾಧೆಯಿಂದ ಧ್ರುವಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೂಲಗಳ ಪ್ರಕಾರ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಧ್ರುವ ಕಳೆದ ಜುಲೈ 29 ರಂದು ವಿಷ ಸೇವಿಸಿದ್ದರು. ಆ ಬಳಿಕ ಅವರನ್ನು ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಧ್ರುವ ಶರ್ಮಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಧ್ರುವ ಶರ್ಮಾ ಅವರ ಮೃತ ದೇಹ ಸಂಪೂರ್ಣವಾಗಿ ನೀಲಿ ಬಣ್ಣಕ್ಕೆ ತಿರುಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Advertisement