ಬೆಂಗಳೂರು: ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟಿ ಜಯಂತಿ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಾಧ್ಯಮದ ಜತೆ ಮಾತನಾಡಿದ್ದಾರೆ.
ನಾನು ಆರೋಗ್ಯವಾಗಿದ್ದೇನೆ. ವಿಕ್ರಂ ಆಸ್ಪತ್ರೆಯ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡಿರುವುದಕ್ಕೆ ನಾನಿಂದು ಗುಣಮುಖಳಾಗಿ ಇಂದು ನಿಮ್ಮ ಮುಂದೆ ಕುಳಿತಿದ್ದೇನೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ಬೇರೆ ಭಾಷೆಯ ಚಾನೆಲ್ ಗಳು ನನ್ನ ಆರೋಗ್ಯದ ಬಗ್ಗೆ ಏನೇನೋ ವಿಷಯಗಳನ್ನು ಸುಳ್ಳು ವದಂತಿಗಳನ್ನು ಹಬ್ಬಿಸಿದವು. ಆದರೆ ಕನ್ನಡ ಮಾಧ್ಯಮಗಳು ಮತ್ತು ಟಿವಿ ಚಾನೆಲ್ ಗಳು ಬಹಳ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇಂದು ನನಗೆ ಕನ್ನಡ ಮಾಧ್ಯಮಗಳ ಮುಂದೆ ಮಾತನಾಡಲು ಧೈರ್ಯ ಬಂದಿದೆ ಎಂದು ಜಯಂತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಕಳೆದ 12 ದಿನಗಳ ಹಿಂದೆ ವಿಕ್ರಂ ಆಸ್ಪತ್ರೆಯಲ್ಲಿ ಜಯಂತಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ವಿಕ್ರಂ ಆಸ್ಪತ್ರೆ ಮೂಲಗಳು ತಿಳಿಸಿವೆ.
Advertisement