ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅವರು ನಿನ್ನೆ ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್ಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಫುಡ್ ಕಿಟ್ ವಿತರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಮನೆ ಅಗತ್ಯ ಇರುವ ಕಲಾವಿದರು ಅರ್ಜಿ ಹಾಕಬಹುದು. ತಕ್ಷಣವೇ ಅಂಥಹ ಕಲಾವಿದರಿಗೆ ಕಡಿಮೆ ದರದಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದರು.
ಈಚೆಗೆ ಪ್ರಕಟಿಸಲಾದ ಪ್ಯಾಕೇಜ್ನಲ್ಲಿ ಕಲಾವಿದರಿಗೆ 3,000 ರೂಪಾಯಿ ನೀಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದರಲ್ಲಿ ಚಿತ್ರರಂಗದ ಪೋಷಕ ಕಲಾವಿದರೂ ಸೇರಿದ್ದಾರಾ ಇಲ್ಲವಾ ಎಂಬ ಬಗ್ಗೆ ಗೊಂದಲವಿದೆ. ಚಿತ್ರರಂಗದ ಕಲಾವಿದರಿಗೂ ಆ ಹಣ ಸಿಗುವ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕ್ರಮ ವಹಿಸುವ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಹೇಳಿದರು.
ಪೋಷಕ ಕಲಾವಿದರನ್ನು ಆದ್ಯತೆಯ ಗುಂಪು ಎಂದು ಪರಿಗಣಿಸಿ ಅವರಿಗೂ ವ್ಯಾಕ್ಸಿನೇಷನ್ ನೀಡಲಾಗುವುದು. ಈ ಬಗ್ಗೆ ಕಲಾವಿದರ ಪಟ್ಟಿ ನೀಡುವಂತೆ ಕೇಳಲಾಗಿದೆ. ಇದಲ್ಲದೆ, ಈ ಫುಡ್ ಕಿಟ್ ಪಡೆಯುತ್ತಿರುವ ಎಲ್ಲ ಕಲಾವಿದರಿಗೆ ವೈಯಕ್ತಿಕವಾಗಿ ತಲಾ 1,000 ರೂಪಾಯಿ ಚೆಕ್ ನೀಡುವುದಾಗಿ ಇದೇ ವೇಳೆ ಡಿಸಿಎಂ ಹೇಳಿದರು.
ಸಾವಿನ ಲೆಕ್ಕ ಮುಚ್ಚಿಡುತ್ತಿಲ್ಲ: ಸರಕಾರವು ಕೋವಿಡ್ ಸಾವಿನ ಲೆಕ್ಕವನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಅರೋಪ ಅಸತ್ಯದಿಂದ ಕೂಡಿದೆ. ಪ್ರತಿ ಸೋಂಕಿತನ ಬಗ್ಗೆಯೂ ಮಾಹಿತಿ ಇದೆ. ಯಾರಾದರೂ ಮೃತಪಟ್ಟರೆ ಆ ಮಾಹಿತಿಯೂ ವಿವಿಧ ಹಂತಗಳಲ್ಲಿ ದಾಖಲಾಗುತ್ತಿದೆ. ಇದೆಲ್ಲವನ್ನು ಬಹಳ ವ್ಯವಸ್ಥಿತವಾಗಿ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪದಲ್ಲಿ ಹುರಳಿಲ್ಲ. ಜನರಲ್ಲಿ ಗೊಂದಲ ಉಂಟು ಮಾಡುವುದು ಬೇಡ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೂ ಲಸಿಕೆ ಅಭಾವ ಇದೆ ಎನ್ನುವುದು ನಿಜ. ಆದರೆ, ಸರಕಾರ ಉತ್ಪಾದಕರಿಂದ ಲಸಿಕೆ ಪಡೆದು ಜನರಿಗೆ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಹಂತ ಹಂತವಾಗಿ ಲಭ್ಯವಾಗುತ್ತಿರುವ ಲಸಿಕೆಯನ್ನು ಆಗಿಂದಾಗ್ಗೆ ಕೊಡಲಾಗುತ್ತಿದೆ. ಆದ್ಯತೆಯ ಮೇರೆಗೆ ಯಾರಿಗೆ ಕೋಡಬೇಕೋ ಅವರಿಗೆ ಕೊಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹಿರಿಯ ಕಲಾವಿದರಾದ ಹೊನ್ನವಳ್ಳಿ ಕೃಷ್ಣ. ಮೀಸೆ ಅಂಜನಪ್ಪ, ಉಮೇಶ್ ಹೆಗ್ಡೆ, ಡಿಂಗ್ರಿ ನಾಗರಾಜ್, ಸಿತಾರಾ ಹಾಗೂ ಟ್ರಸ್ಟ್ನ ಭರತ್ ಗೌಡ, ನಟರಾದ ಗಣೇಶ್ ರಾವ್ ಕೆಸರ್ಕಾರ್, ಕೆಂಪೇಗೌಡ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದರು. ಡಿಸಿಎಂ ಅವರು ಸಾಂಕೇತಿಕವಾಗಿ 30 ಕಲಾವಿದರಿಗೆ ಕಿಟ್ ವಿತರಣೆ ಮಾಡಿದ್ದು, ಉಳಿದ 200 ಕಿಟ್ಗಳನ್ನು ಕಲಾವಿದರ ಮನೆಗೆ ತಲುಪಿಸಲಾಗುವುದು ಎಂದು ಭರತ್ ಗೌಡ ಮಾಹಿತಿ ನೀಡಿದರು.
Advertisement