ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು ಕೋರಿ ಇಡೀ ಚಿತ್ರತಂಡಕ್ಕೆ ಪುನೀತ್ ರಾಜ್ ಕುಮಾರ್ ಶುಭ ಕೋರಿದರು. ನಂತರ ಅವರ ಆರೋಗ್ಯ ಸಮಸ್ಯೆ ಬಿಗಡಾಯಿಸಿದೆ.
ವಿಕ್ರಂ ಆಸ್ಪತ್ರೆಗೆ ನಟ ಯಶ್, ದರ್ಶನ್, ಗಣೇಶ್ ಸೇರಿದಂತೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯದ ಬಗ್ಗೆ ಇನ್ನೂ ಹೇಳುವುದಕ್ಕೆ ಆಗಲ್ಲ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ. ರಂಗನಾಥ್ ತಿಳಿಸಿದ್ದಾರೆ. ಹೃದಯಾಘಾತ ಸಂಭವಿಸಿದ ನಂತರ ಪುನೀತ್ ನಿರ್ಲಕ್ಷಿಸಿದ್ದು, ಬೆಳಗ್ಗೆ 11 ಗಂಟೆ ವೇಳೆಗೆ ಆಸ್ಪತ್ರೆಗೆ ಬಂದಿದ್ದು, ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದರು.
Advertisement