ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಉದಯೋನ್ಮುಖ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಸೌಜನ್ಯ ಕೊಡಗಿನ ಕುಶಾಲನಗರದ ಮೂಲದವರಾಗಿದ್ದು ಹಲವು ಧಾರಾವಾಹಿಗಳು ಮತ್ತು ಚೌಕಟ್ಟು ಹಾಗೂ ಫನ್ ಸಿನೆಮಾಗಳಲ್ಲಿ ನಟಿಸಿದ್ದರು.
ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ಥ್ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಕೆಲ ಸಮಯಗಳಿಂದ ತಮ್ಮ ಬಾಯ್ ಫ್ರೆಂಡ್ ಜೊತೆ ಅಪಾರ್ಟ್ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಸ್ನೇಹಿತನಿಗೆ ತಿಂಡಿ ತೆಗೆದುಕೊಂಡು ಬಾ ಎಂದು ಹೇಳಿ ಕಳುಹಿಸಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಡೆತ್ ನೋಟ್ ನಲ್ಲಿ ತಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಯಾರಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಸಾಕಷ್ಟು ಚಿಕಿತ್ಸೆ ತೆಗೆದುಕೊಂಡರೂ ಕಡಿಮೆಯಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದು ತನ್ನ ಕುಟುಂಬಸ್ಥರು ಹಾಗೂ ಸ್ನೇಹಿತರನ್ನುದ್ದೇಶಿಸಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.
Advertisement