ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.
80 ವರ್ಷದ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ(ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಇದನ್ನು ಓದಿ: ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
ಲೋಹಿತಾಶ್ವ ಅವರಿಗೆ ಮೂವರು ಮಕ್ಕಳು, ಅವರಲ್ಲಿ ಕನ್ನಡ ಚಿತ್ರರಂಗದಲ್ಲಿ ಉತ್ತಮ ಖಳನಟನಾಗಿ ಗುರುತಿಸಿಕೊಂಡಿರುವ ಶರತ್ ಲೋಹಿತಾಶ್ವ ಕೂಡ ಒಬ್ಬರು. ವತ್ಸಲಾ ಅವರ ಪತ್ನಿಯ ಹೆಸರು. ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.
Advertisement