ನಟ ಕಿಶೋರ್
ನಟ ಕಿಶೋರ್

ಕಾಂತಾರ ಮತ್ತು ಧರ್ಮ; ಸಿನಿಮಾ ಸುತ್ತ ಎದ್ದಿರುವ ವಿವಾದಕ್ಕೆ ನಟ ಕಿಶೋರ್ ಕುಮಾರ್ ಹೇಳಿದ್ದಿಷ್ಟು...

ಕಾಂತಾರ ಸಿನಿಮಾದ ಸುತ್ತ ಎದ್ದಿರುವ ವಿವಾದಗಳ ಕುರಿತು ನಟ ಕಿಶೋರ್ ಕೂಡ ಪ್ರತಿಕ್ರಿಯಿಸಿದ್ದು, ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಸುದೀರ್ಘ ಬರಹವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ‘ಕಾಂತಾರ’ ಸಿನಿಮಾ ದೇಶ, ಭಾಷೆಯ ಗಡಿ ದಾಟಿ ಯಶಸ್ಸು ಸಾಧಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿರುವ ‘ಆ ದಿನಗಳು’ ಖ್ಯಾತಿಯ ನಟ ಚೇತನ್‌, ಭೂತಕೋಲ ಹಿಂದೂ ಸಂಸ್ಕೃತಿ ಎಂದು ಹೇಳಿರುವ ರಿಷಬ್ ಶೆಟ್ಟಿ ಅವರ ಮಾತು ಸುಳ್ಳು ಎಂದಿದ್ದಾರೆ. ಈ ಸುತ್ತ ವಿವಾದಗಳು ಭುಗಿಲೆದ್ದಿದ್ದು, ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ.

ಈ ಕುರಿತು ನಟ ಕಿಶೋರ್ ಕೂಡ ಪ್ರತಿಕ್ರಿಯಿಸಿದ್ದು, ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಸುದೀರ್ಘ ಬರಹವೊಂದನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ಕಿಶೋರ್ ಫಾರೆಸ್ಟ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಿದ್ದಾರೆ.

ಕಾಂತಾರ ಮತ್ತು ಧರ್ಮ

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ. ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?

ಎಲ್ಲ ಒಳ್ಳೆಯ ಸಿನಿಮಾಗಳಂತೆ 'ಕಾಂತಾರ' ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ, ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡಮಟ್ಟದ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು.

ಕೇವಲ ಓಟಿಗಾಗಿ ಪಟೇಲ್, ಗಾಂಧಿ, ಬೋಸ್, ನೆಹರೂ ಸಹಿತ ಕೋಟಿ ಕೋಟಿ ಸ್ವಾತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಹೇಳಿದ್ದಾರೆ.

ಚೇತನ್ ಹೇಳಿದ್ದೇನು?

ಭೂತಕೋಲ ಹಿಂದೂ ಸಂಸ್ಕೃತಿ ಎಂದು ಹೇಳಿರುವ ರಿಷಬ್ ಶೆಟ್ಟಿ ಅವರ ಮಾತು ಸುಳ್ಳು. ಆದರೆ, ನಮ್ಮ ಪಂಬದ, ನಲಿಕೆ, ಪರವರ ಬಹುಜನರ ಸಂಪ್ರದಾಯಗಳು. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ನಾನು ಕೋರುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com