ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ ಸರಣಿ ಬಂದ್ ಆಚರಿಸಿದ್ದರ ಬೆನ್ನಲ್ಲೇ ನಟಿ ರಚಿತಾ ರಾಮ್ ಕೂಡ ಈ ಹೋರಾಟಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ನಟಿ ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಂಪಲ್ ಕ್ವೀನ್ ನಡೆಗೆ ಹಲವರು ಮೆಚ್ಚಿ ಕಾಮೆಂಟ್ ಮಾಡಿದ್ದಾರೆ. 'ಒಳ್ಳೆಯ ನಿರ್ಧಾರ' ಎಂದು ಹಲವರು ರಚಿತಾ ರಾಮ್ ಅವರ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
'ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ ನನ್ನ ಜನ್ಮ ದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ. ನಿಮ್ಮ ರಚ್ಚು' ರಚಿತಾ ಬರೆದುಕೊಂಡಿದ್ದಾರೆ.
ನಟಿ ರಚಿತಾ ರಾಮ್ ಅವರು ಪ್ರತಿವರ್ಷ ಅಕ್ಟೋಬರ್ 3ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಆದರೆ, ಈ ಭಾರಿ ತಮ್ಮ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಇಂತಹ ಹೊತ್ತಿನಲ್ಲಿ ಹುಟ್ಟುಹಬ್ಬದ ಆಚರಣೆಯು ಸರಿಯಲ್ಲ ಎಂದು ನಿರ್ಧರಿಸಿರುವ ರಚಿತಾ, ಅದನ್ನು ತಮ್ಮ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
Advertisement