ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ಕೊಟ್ಟು ಬೆಳೆಸಿದ್ದರು: ದುನಿಯಾ ವಿಜಯ್

ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು.
ಸಿದ್ಲಿಂಗು 2 ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟ ದುನಿಯಾ ವಿಜಯ್
ಸಿದ್ಲಿಂಗು 2 ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟ ದುನಿಯಾ ವಿಜಯ್
Updated on

ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ, ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ನಗರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ನಟ ಮತ್ತು ನಿರ್ದೇಶಕ ‘ದುನಿಯಾ’ ವಿಜಯ್‍ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡನ್ನು ಬಿಡುಗಡೆ ಮಾಡಿದರು.

ಹಾಡಿಗೆ ಅರಸು ಆಂತಾರೆ ಸಾಹಿತ್ಯ ಬರೆದಿದ್ದು, ಗೀತ ಸಂಯೋಜನೆಯನ್ನು ಅನೂಪ್ ಸೀಲಿನ್ ಅವರು ನಿರ್ವಹಿಸಿದ್ದಾರೆ. ಚಿನ್ಮಯಿ ಶ್ರೀಪಾದ ಅವರ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ.

ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದುನಿಯಾ ವಿಜಯ್ ಅವರು, ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ ‘ಸಿದ್ಲಿಂಗು 3’ ಮಾಡಲಿ ಎಂಬುದು ನನ್ನಾಸೆ’ ಎಂದು ಹೇಳಿದರು.

ಇದೇ ವೇಳೆ ನಾನು ಯೋಗಿಯ ದೊಡ್ಡ ಅಭಿಮಾನಿ ಎಂದ ವಿಜಯ್‍ ಕುಮಾರ್, ಯಾವುದೇ ಪಾತ್ರವಿದ್ದರೂ ನಾನು ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮರ್ಥ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ? ಬರದಿದ್ದರೆ ನಾನು ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ ಎಂದು ತಿಳಿಸಿದರು.

ಸಿದ್ಲಿಂಗು 2 ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟ ದುನಿಯಾ ವಿಜಯ್
ಪ್ರೇಮಿಗಳ ದಿನದಂದು ಸಿದ್ಲಿಂಗು-2 ಸಿನಿಮಾ ರಿಲೀಸ್

ಚಿತ್ರದ ನಾಯಕ ಯೋಗಿ ಮಾತನಾಡಿ, ‘‘ಸಿದ್ಲಿಂಗು’ ಚಿತ್ರವನ್ನು ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಭಾಗ ಎರಡು ಸಹ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗೆ ಮತ್ತು ಚಿತ್ರತಂಡಕ್ಕಿದೆ. ಆಗ ‘ಸಿದ್ಲಿಂಗು’, ಕನ್ನಡ ಚಿತ್ರರಂಗಕ್ಕೆ ಬೇರೆ ತರಹದ ಸಿನಿಮಾ ಆಯ್ತು. ಇದು ಅದರ ಮುಂದುವರೆದ ಭಾಗ. ವಿಜಯಪ್ರಸಾದ್‍ ಜೊತೆಗೆ ಕೆಲಸ ಮಾಡುವುದು ಖುಷಿಯ ವಿಷಯ. ಪ್ರತಿಯೊಬ್ಬರಿಂದ ಒಳ್ಳೆಯ ಕೆಲಸ ತೆಗೆಯುತ್ತಾರೆ. ನನ್ನನ್ನು ಮತ್ತು ವಿಜಯಪ್ರಸಾದ್‍ ಅವರನ್ನು ಯಾರೂ ನಂಬದಂತಹ ಸಮಯದಲ್ಲಿ ಹರಿ ಮತ್ತು ರಾಜು ಅವರು ನಮ್ಮನ್ನು ನಂಬಿ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬಂದರು. ನಾನು ಬದುಕಿರುವವರೆಗೂ ಅವರಿಗೆ ಚಿರಋಣಿ.

ಇವತ್ತು ಟ್ರೇಲರ್‍ ಬಿಡುಗಡೆ ಮಾಡುವುದಕ್ಕೆ ನಮ್ಮ ಮಾವ ಬಂದಿದ್ದಾರೆ. ನಾನು ಚಿಕ್ಕ ವಯಸ್ಸಲ್ಲಿ ವಿಜಯ್‍ ಅವರನ್ನು ಮಾವ ಅಂತ ಕರೆದರೆ, ಹೊಡೆದು ಕುಮಾರ ಅಂತ ಕರೆಯೋ ಎನ್ನುತ್ತಿದ್ದರು. ಇವತ್ತು ಮೊದಲ ಬಾರಿಗೆ ವೇದಿಕೆಯೊಂದರ ಮೇಲೆ ನಿಂತು ಮಾವ ಎಂದು ಕರೆಯುತ್ತಿದ್ದೇನೆ. ಇನ್ನು ಮುಂದೆ ಎಲ್ಲೇ ಸಿಕ್ಕರೂ ಮಾವ ಎಂದು ಕರೆಯುತ್ತೇನೆ. ನಮ್ಮ ಚಿತ್ರತಂಡದವರೆಲ್ಲಾ ಅವರನ್ನು ಕರೆಸಿ ಪ್ರೀ-ರಿಲೀಸ್‍ ಇವೆಂಟ್‍ ಮಾಡಬೇಕು ಎಂದು ಹೇಳುತ್ತಿದ್ದರು. ಅವರೂ ಒಪ್ಪಿ ಇವತ್ತು ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದರು.

ಕಾರ್ಯಕ್ರಮದಲ್ಲಿ ಯೋಗಿ ಅವರ ತಂದೆ ಮತ್ತು ನಿರ್ಮಾಪಕ ಟಿಪಿ ಸಿದ್ಧರಾಜು, ನಟ-ನಿರ್ದೇಶಕ ಬಿ ಸುರೇಶ್, ಸೀತಾ ಕೋಟೆ, ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮತ್ತು ಇತರರು ಉಪಸ್ಥಿತರಿದ್ದರು.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್‍ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್‍ ರಂಗನಾಥ್‍, ಸೀತಾ ಕೋಟೆ, ಮಹಾಂತೇಶ್‍, ಆ್ಯಂಟೋನಿ ಕಮಲ್‍, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ, ಅನೂಪ್‍ ಸೀಳಿನ್‍ ಸಂಗೀತ ಮತ್ತು ಅಕ್ಷಯ್ ಪಿ. ರಾವ್‍ ಅವರ ಸಂಕಲನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com