
ಬೆಂಗಳೂರು: ಈ ಹಿಂದೆ ಜನ್ಮ ದಿನಾಚರಣೆ ವಿಚಾರವಾಗಿ ಫ್ಯಾನ್ಸ್ ಗಳಿಗೆ ವಿಡಿಯೋ ಸಂದೇಶ ರವಾನಿಸಿದ್ದ ನಟ ದರ್ಶನ್ ಇದೀಗ ತಮ್ಮ ಸೆಲೆಬ್ರಿಟಿಗಳಿಗೆ ಮತ್ತೊಂದು ಸಂದೇಶ ಕಳುಹಿಸಿದ್ದಾರೆ.
ಹೌದು.. ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಅನಾರೋಗ್ಯ ಸಮಸ್ಯೆಯಿಂದಾಗಿ ಈ ಹಿಂದೆ ತಮ್ಮ ಜನ್ಮದಿನಾಚರಣೆ ಆಚರಿಸಿಕೊಂಡಿರಲಿಲ್ಲ. ಆದರೆ ಅವರ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ದರ್ಶನ್ ಸಂದೇಶದ ಹಿನ್ನಲೆಯಲ್ಲಿ ಅವರು ಅದನ್ನು ರದ್ದು ಮಾಡಿದ್ದರು. ಇದೀಗ ಇದೇ ವಿಚಾರವಾಗಿ ನಟ ದರ್ಶನ್ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ.
ಹೌದು.. ಈ ಬಾರಿ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿರುವ ನಟ ದರ್ಶನ್, ಅಭಿಮಾನಿಗಳ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಧನ್ಯವಾದ ಹೇಳಿದ್ದಾರೆ.
ಸಂದೇಶದಲ್ಲೇನಿದೆ?
'ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಮಸ್ಕಾರ... ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ ಎಂದಿದ್ದಾರೆ.
ಅಂತೆಯೇ, 'ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.
Advertisement