

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ 'ಬಾಸ್' ಚಿತ್ರದ ಬಿಡುಗಡೆ ತಡೆಯುವ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್, ವಿಚಾರಣೆಯಲ್ಲಿರುವ ಪ್ರಕರಣಕ್ಕೆ ಹೋಲುವ ಕೆಲವು ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂಬ ಕಾರಣಕ್ಕೆ, ಆ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಆ ಚಿತ್ರದಿಂದ ಪ್ರಭಾವಿತವಾಗಿ ಅಥವಾ ಅದರ ಪ್ರಭಾವಕ್ಕೆ ಒಳಗಾಗಿ ತೀರ್ಪು ನೀಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ಆರೋಪಿಸಿ, ಸಿರಿ ಪ್ರೊಡಕ್ಷನ್ಸ್ ನಿರ್ಮಿಸಿರುವ ಹಾಗೂ ಲಾವಾ ವಿ ನಿರ್ದೇಶಿಸಿರುವ 'ಬಾಸ್' ಚಿತ್ರದ ಬಿಡುಗಡೆಯನ್ನು ತಡೆಯುವಂತೆ ಕೋರಿ ದರ್ಶನ್ ಮತ್ತು ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಜೂನ್ 2ರಂದು ವಜಾಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ದರ್ಶನ್ ಮತ್ತು ವಿಜಯಲಕ್ಷ್ಮಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಕುರಿತು ನ್ಯಾಯಾಲಯ, ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಾದ ನಂತರ, ನ್ಯಾಯಾಲಯದ ವಿಚಾರಣೆ ಮತ್ತು ತನಿಖೆಯ ಬೆಳವಣಿಗೆಗಳನ್ನು ಆಧರಿಸಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರತಿದಿನ ವರದಿ ಮಾಡುತ್ತಿವೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದ ಸಾಕಷ್ಟು ಮಾಹಿತಿ ಈಗಾಗಲೇ ಸಾರ್ವಜನಿಕ ವಲಯದಲ್ಲಿದೆ ಎಂದು ಹೇಳಿತು.
ಚಿತ್ರದಲ್ಲಿರುವ ವಿಷಯಗಳು ಕೂಡ ಸಾರ್ವಜನಿಕ ವಲಯದಲ್ಲಿರುವ ಮಾಹಿತಿಯನ್ನು ಆಧರಿಸಿವೆ. ಆದ್ದರಿಂದ ಅರ್ಜಿದಾರರ ಸಾಂವಿಧಾನಿಕ ಖಾಸಗಿತನದ ಹಕ್ಕು ಉಲ್ಲಂಘನೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
'ಬಾಸ್' ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಈಗಾಗಲೇ ಪ್ರಮಾಣಪತ್ರ ನೀಡಿದ್ದು, ಮಾರ್ಗಸೂಚಿಗಳ ಪ್ರಕಾರ ಚಿತ್ರದ ಆರಂಭದಲ್ಲೇ ಅಗತ್ಯವಾದ ಡಿಸ್ಕ್ಲೈಮರ್ಗಳನ್ನು ಸಹ ಪ್ರದರ್ಶಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಇನ್ನೊಂದೆಡೆ, ದರ್ಶನ್ ಮತ್ತು ವಿಜಯಲಕ್ಷ್ಮಿ ಪರ ವಕೀಲರು, ಚಿತ್ರದ ಟೀಸರ್ನಲ್ಲಿ "Inspired by True Events" ಎಂಬ ಘೋಷಣೆ ಇರುವುದಲ್ಲದೆ, ದರ್ಶನ್ಗೆ ಅಭಿಮಾನಿಗಳು ಬಳಸುವ 'ಬಾಸ್' ಎಂಬ ಹೆಸರು ಬಳಸಲಾಗಿದೆ. ಚಿತ್ರದಲ್ಲಿ ನಡೆಯುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ 13 ವಾಸ್ತವಿಕ ಸಾಮ್ಯತೆಗಳು ಇರುವುದರಿಂದ ಚಿತ್ರದ ಬಿಡುಗಡೆ ತಡೆಯಬೇಕು ಎಂದು ವಾದಿಸಿದ್ದರು.