

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿಜೇತರಾಗಿ ಗಮನ ಸೆಳೆದಿದ್ದ ಗಿಲ್ಲಿ ನಟ ಇದೀಗ ಬೆಳ್ಳಿತೆರೆಯಲ್ಲಿ ನಾಯಕ ನಟನಾಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಬಿಗ್ ಬಾಸ್ ವೇದಿಕೆಯಲ್ಲಿ ತಮ್ಮ ವ್ಯಕ್ತಿತ್ವ ಮತ್ತು ಪ್ರತಿಭೆಯ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಅವರು, ಇದೀಗ ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಗಿಲ್ಲಿ ನಟನನ್ನು ನಾಯಕನಾಗಿ ಪರಿಚಯಿಸುತ್ತಿದೆ.
ಇತ್ತೀಚಿನ ವರ್ಷಗಳಲ್ಲಿ ಹಲವು ಯಶಸ್ವಿ ಹಾಗೂ ಭಾರಿ ಬಜೆಟ್ ಸಿನಿಮಾಗಳನ್ನು ನೀಡಿರುವ ಕೆವಿಎನ್ ಪ್ರೊಡಕ್ಷನ್ಸ್, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ.
ಜೂನ್ 21ರಂದು ಮುಹೂರ್ತ
ಈ ಬಹುನಿರೀಕ್ಷಿತ ಚಿತ್ರದ ಮುಹೂರ್ತ ಸಮಾರಂಭ ಜೂನ್ 21ರಂದು ನಡೆಯಲಿದ್ದು, ಚಿತ್ರರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಬಿಗ್ ಬಾಸ್ ಟ್ರೋಫಿ ಗೆದ್ದ ಕೆಲವೇ ದಿನಗಳಲ್ಲಿ ಗಿಲ್ಲಿ ನಟ ದೊಡ್ಡ ಬ್ಯಾನರ್ನ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ.
ಚಿತ್ರವನ್ನು ಚಂದ್ರ ಮೋಹನ್ ನಿರ್ದೇಶನ ಮಾಡಲಿದ್ದು, ಕೆವಿಎನ್ ಪ್ರೊಡಕ್ಷನ್ಸ್ನ ಕಾರ್ಯಕಾರಿ ನಿರ್ಮಾಪಕರಾದ ನವೀನ್ ಹಾಗೂ ಹರೀಶ್ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸಂಸ್ಥಾಪಕ ಕೆ. ವೆಂಕಟ ನಾರಾಯಣ ಹಾಗೂ ಸಂಸ್ಥೆಯ ಬಿಸಿನೆಸ್ ಹೆಡ್ ಸುಪ್ರಿತ್ ಅವರ ಬೆಂಬಲವೂ ಈ ಯೋಜನೆಗೆ ಸಿಕ್ಕಿದೆ.
ಚಿತ್ರದ ಶೀರ್ಷಿಕೆ, ನಾಯಕಿ ಹಾಗೂ ಇತರೆ ತಾರಾಗಣದ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇದೆ. ಗಿಲ್ಲಿ ನಟನ ಈ ಹೊಸ ಸಿನಿಮಾ ಪಯಣದ ಬಗ್ಗೆ ಸಿನಿಪ್ರಿಯರಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆಗಳು ಮೂಡಿವೆ.
Advertisement