

ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ವಿಚ್ಛೇದನ ನೀಡಿ ಅದೇಶಿಸಿದೆ.
ನ್ಯಾ.ಡಿ.ಕೆ.ಸಿಂಗ್ ಮತ್ತು ನ್ಯಾ.ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠವು ಆದೇಶ ನೀಡಿದೆ. ನಾಗರತ್ನ ಮತ್ತು ಮೂವರು ಮಕ್ಕಳ ಜೀವನವನ್ನು ಪರಿಗಣಿಸಿ, ವಿಜಯ್ ಸ್ಥಾನಮಾನ, ಹಣಕಾಸು ಸ್ಥಿತಿ ನೋಡಿ ನಾಗರತ್ನಗೆ ಎರಡು ಕೋಟಿ ರೂ ಜೀವನಾಂಶ ನೀಡುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.
ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೆ ದುನಿಯಾ ವಿಜಯ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
‘ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ. ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ ವಕೀಲರಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ’
‘ಈ ವಿಚಾರಕ್ಕೆ (ವಿಚ್ಛೇದನ) ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ, ಅವರಿಗೆ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ’ ಎಂದು ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.
ವಿಜಯ್ - ನಾಗರತ್ನ ದಂಪತಿಗೆ ಮೂವರು ಮಕ್ಕಳಿದ್ದಾರೆ, ಮೋನಿಷಾ, ಮೋನಿಕಾ, ಮತ್ತು ಮಗ ಸಾಮ್ರಾಟ್. ವಿಜಯ್ ಮತ್ತು ನಾಗರತ್ನ 2013ರಲ್ಲಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದರು. 2014ರಲ್ಲಿ ಸಂಧಾನ ನಡೆದು ಅರ್ಜಿ ಹಿಂಪಡೆಯಲಾಗಿತ್ತು. ಆದರೆ ವಿಜಯ್ ಅವರು 2018ರಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಮತ್ತೆ ಅರ್ಜಿ ಸಲ್ಲಿಸಿದ್ದರು. ಸುಮಾರು 6 ವರ್ಷಗಳ ವಿಚಾರಣೆಯ ಬಳಿಕ ಜೂನ್ 2024ರಲ್ಲಿ ಬೆಂಗಳೂರಿನ ನ್ಯಾಯಾಲಯವು ದುನಿಯಾ ವಿಜಯ್ ಅವರ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿತ್ತು. ಆದೇಶವನ್ನು ಪ್ರಶ್ನಿಸಿ ವಿಜಯ್, ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದೀಗ ಆದೇಶ ಹೊರಬಿದ್ದಿದ್ದು, ವಿಜಯ್ ಹಾಗೂ ನಾಗರತ್ಯ ಅವರಿಗೆ ಅಧಿಕೃತವಾಗಿ ವಿಚ್ಛೇದನ ನೀಡಲಾಗಿದೆ.