ನವದೆಹಲಿ: ಜೂನ್ 26ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಯಾಗಿ ಭಾಗಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಮುಖ್ಯಸ್ಥ ಎನ್ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆಡಳಿತಗಾರರ ಸಮಿತಿ(ಸಿಒಎ) ನೀಡಿದ ದೂರಿನ ವಿಚಾರಣೆ ನಡೆಸಿದ ಕೋರ್ಟ್, ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.
ಅನರ್ಹಗೊಂಡ ಸದಸ್ಯರಾದ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರು ಲೋಧಾ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೊಳಿಸುವ ಸಂಬಂಧ ಕರೆಯಲಾಗಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆಡಳಿತಗಾರರ ಸಮಿತಿ ಸುಪ್ರೀಂ ಕೋರ್ಟ್ ಗೆ ನೀಡಿದ ವರದಿಯಲ್ಲಿ ಆರೋಪಿಸಿತ್ತು.