ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( ಬಿಸಿಸಿಐ) ಮುಂದಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಮುಂಬೈಯಲ್ಲಿ ಭಾನುವಾರ ನಡೆದ ಮಂಡಳಿಯ ಸದಸ್ಯರ ಅನೌಪಚಾರಿಕ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಿಸಿಸಿಐನ ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದೆ. ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥರಾಗಿರುವ ಗಂಗೂಲಿ ಮತ್ತಿತರ ಅಭ್ಯರ್ಥಿಗಳು ಔಪಚಾರಿಕ ಪ್ರಕ್ರಿಯೆಗಳನ್ನು ಬೆಳಗ್ಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.ಅವರು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಪ್ರತಿನಿಧಿಸುತ್ತಿದ್ದಾರೆ.
ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಸಚಿವ ಅನುರಾಗ್ ಠಾಗೂರ್ ಸಹೋದರ ಅರುಣ್ ಧುಮಲ್- ಖಜಾಂಚಿ, ಕೇರಳ ಕ್ರಿಕೆಟ್ ಅಸೋಯೇಷನ್ ಅಧ್ಯಕ್ಷ ಜಯೇಶ್ ಜಾರ್ಜ್ - ಜಂಟಿ ಕಾರ್ಯದರ್ಶಿಯಾಗಲಿದ್ದಾರೆ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಅಕ್ಟೋಬರ್ 23 ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಜಿ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್, ಮಾಜಿ ಕಾರ್ಯದರ್ಶಿ ನಿರಂಜನ್ ಶಾ, ಹಾಗೂ ಠಾಕೂರ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅನುರಾಗ್ ಠಾಕೂರ್ ಗಂಗೂಲಿ ಅವರನ್ನು ಬೆಂಬಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಬಿಸಿಸಿಐ ಅಧ್ಯಕ್ಷರಾಗುತ್ತಿದ್ದು, ಬ್ರಿಜೇಶ್ ಪಾಟೀಲ್ ಐಪಿಎಲ್ ಆಡಳಿತ ಮಂಡಳಿ ಮುಖ್ಯಸ್ಥರಾಗುವ ಸಾಧ್ಯತೆಯಿದೆ
Advertisement