ಕಾನ್ಪುರ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಗ್ರೀನ್ ಪಾರ್ಕ್ ಆತಿಥ್ಯವನ್ನು ವಹಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಯಾವ ರೀತಿಯ ಪ್ರದರ್ಶನ ತೋರಲಿದೆ ಎನ್ನುವ ಕುತೂಹಲ ಜೋರಾಗಿದೆ.
ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆದ ಬಳಿಕ ಭಾರತ ತಂಡವು ಆಡುತ್ತಿರುವ ಮೊದಲ ಟೆಸ್ಟ್ ಸರಣಿ ಇದಾಗಿದೆ. ಇನ್ನು ಮೊದಲ ಟೆಸ್ಟ್ಗೆ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಹಂಗಾಮಿ ನಾಯಕ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ತಾರಾ ಆಟಗಾರರ ಅನುಪಸ್ಥಿತಿಯ ನಡುವೆ ಅಜಿಂಕ್ಯ ರಹಾನೆ, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ. ಭಾರತ ತಂಡವು ಮೂವರು ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿದಿದೆ.
ಅತ್ತ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್'ನ ಸೇಲಿನ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಭಾರತ ತಂಡವಿದ್ದರೆ, ಇತ್ತ ಟಿ20 ಸರಣಿಯಲ್ಲುಂಟಾದ ಸೋಲಿಗೆ ಭಾರತಕ್ಕೆ ತಿರುಗೇಟು ನೀಡುವ ತವಕದಲ್ಲಿ ಕಿವೀಸ್ ಪಡೆ ಇದೆ. ಭಾರತದ ನೆಲದಲ್ಲಿ ಒಂದೇ ಒಂದು ಟೆಸ್ಟ್ ಸರಣಿಯನ್ನೂ ಗೆಲ್ಲದ ಕಿವೀಸ್ ಇತಿಹಾಸ ಬದಲಿಸುವ ಉತ್ಸಾಹದಲ್ಲಿದೆ.
Advertisement