ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್: ಸೂರ್ಯಕುಮಾರ್ ಯಾದವ್‌ಗೆ ಶಾಕ್; ರಹಾನೆ, ಶಾರ್ದೂಲ್‌ಗೆ ಅವಕಾಶ

ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯಕ್ಕಾಗಿ ಬಿಸಿಸಿಐ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಕ್ರಮಣಕಾರಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. 
ವಿರಾಟ್ ಕೊಹ್ಲಿ - ಅಜಿಂಕ್ಯ ರಹಾನೆ
ವಿರಾಟ್ ಕೊಹ್ಲಿ - ಅಜಿಂಕ್ಯ ರಹಾನೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯಕ್ಕಾಗಿ ಬಿಸಿಸಿಐ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಕ್ರಮಣಕಾರಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. 

ಡಬ್ಲ್ಯುಟಿಸಿ ಫೈನಲ್ ಪಂದ್ಯ ಜೂನ್ 7 ರಿಂದ 11 ರವರೆಗೆ ಲಂಡನ್‌ನ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಕ್ರಮಣಕಾರಿ ಬ್ಯಾಟರ್ ಸೂರ್ಯಕುಮಾರ್ ಯಾದವ್, ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ಆಸ್ಟ್ರೇಲಿಯ ವಿರುದ್ಧ ತವರಿನಲ್ಲಿ ನಡೆದ ಸರಣಿಯ ಭಾಗವಾಗಿದ್ದ ಯುವ ಸ್ಟಂಪರ್-ಬ್ಯಾಟರ್ ಇಶಾನ್ ಕಿಶನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐನ ಐವರು ಸದಸ್ಯರ ಆಯ್ಕೆ ಸಮಿತಿ, ಕಾರ್ಯದರ್ಶಿ ಜಯ್ ಶಾ ಮತ್ತು ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಸಂಜೆ ಪಂದ್ಯಕ್ಕೆ ತಂಡವನ್ನು ನಿರ್ಧರಿಸಲು ಸಭೆ ನಡೆಸಿದರು.

ಶ್ರೇಯಸ್ ಅಯ್ಯರ್ ಅವರು ಗಾಯದಿಂದ ಬಳಲುತ್ತಿದ್ದು, ಅಯ್ಯರ್ ಇತ್ತೀಚೆಗಷ್ಟೇ ಯುಕೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಬದಲಿಗೆ 15 ತಿಂಗಳ ನಂತರ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. 

ಅಜಿಂಕ್ಯ ರಹಾನೆ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು 2022ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ಆಡಿದ್ದರು. ನಂತರ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿತ್ತು. ಅಜಿಂಕ್ಯ ರಹಾನೆ ಇತ್ತೀಚೆಗೆ ಐಪಿಎಲ್ 2023ರಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌‌ನಿಂದ ಗಮನ ಸೆಳೆದಿದ್ದರು.

ಆದಾಗ್ಯೂ, ಡಬ್ಲ್ಯುಟಿಸಿ ಫೈನಲ್‌ಗೆ ನಿಯೋಜಿತ ಉಪನಾಯಕನಿಲ್ಲ. ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾದ ಉಪನಾಯಕರಾಗಿದ್ದ ಚೇತೇಶ್ವರ ಪೂಜಾರ ಅವರನ್ನೇ ಮತ್ತೆ ಉಪನಾಯಕನನ್ನಾಗಿ ಮಾಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ತಂಡ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com