
ಜೈಪುರ: ಐಪಿಎಲ್ ಟೂರ್ನಿಯಲ್ಲಿ ಇಂದು ಮಹತ್ವದ ಪಂದ್ಯ ಮುಕ್ತಾಯವಾಗಿದ್ದು, ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.
ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಗುಜರಾತ್ ವಿರುದ್ಧದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರು.
ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.
ಆದರೆ ಶತಕದ ಬಳಿಕ ಕನ್ನಡಿಗ ಪ್ರಸಿದ್ಧ ಕೃಷ್ಣ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು. ವೈಭವ್ ಸೂರ್ಯವಂಶಿ ಬೆನ್ನಲ್ಲೇ ನಿತೀಶ್ ರಾಣಾ ಕೂಡ ಬಂದಷ್ಟೇ ವೇಗವಾಗಿ 4 ರನ್ ಸಿಡಿಸಿ ರಷೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಿಯಾನ್ ಪರಾಗ್ 15 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಸಹಿತ ಅಜೇಯ 32 ರನ್ ಸಿಡಿಸಿ ಗೆಲುವಿನ ಔಪಚಾರಿಕತೆ ಮುಕ್ತಾಯಗೊಳಿಸಿದರು.
ಶತಕದ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವೈಭವ್ ಸೂರ್ಯವಂಶಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Advertisement