

ಬೆಂಗಳೂರು: ಭಾನುವಾರ ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚುನಾವಣೆಯಲ್ಲಿ 191 ಮತಗಳ ಅಂತರದಿಂದ ಗೆದ್ದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತೀವ್ರ ಜಿದ್ದಾಜಿದ್ದಿನಿಂದ ದೇಶದ ಗಮನ ಸೆಳೆದಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಬೆಳಗ್ಗೆಯಿಂದ ಮತದಾನ ನಡೆಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮಂದಿ ಮತದಾನ ಮಾಡಿದರು.
ಸಂಜೆ ವೇಳೆಗೆ ಮತಗಳ ಎಣಿಕೆ ಪ್ರಕ್ರಿಯೆ ಮುಗಿದು ಫಲಿತಾಂಶ ಪ್ರಕಟವಾಗಿದೆ. 20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಹಾಗೂ ಅನಿಲ್ ಕುಂಬ್ಳೆ ಬೆಂಬಲಿತ ಅಭ್ಯರ್ಥಿಯಾಗಿದ್ದ ವೆಂಕಟೇಶ್ ಪ್ರಸಾದ್ಗೆ ಒಟ್ಟು 749 ಮತಗಳು ದೊರೆತರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್ಗೆ 558 ಮತಗಳು ಲಭಿಸಿವೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್ 191 ಮತಗಳ ಅಂತರದಿಂದ ವಿರೋಧಿ ಶಾಂತಕುಮಾರ್ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವೆಂಕಟೇಶ್ ಪ್ರಸಾದ್ ಬಣದಿಂದ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ, ಮಧುಕರ್ ಖಜಾಂಚಿಯಾಗಿ, ಸಂತೋಷ್ ಮೆನನ್ ಪ್ರಧಾನ ಕಾರ್ಯದರ್ಶಿಯಾಗಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು.
ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ ವೇಳೆಯಲ್ಲಿ ಶಾಂತ ಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ನಡೆದ ಚುನಾವಣೆಯಲ್ಲೂ ಸಹ ವೆಂಕಟೇಶ್ ಪ್ರಸಾದ್ ಗೆದ್ದು ಬೀಗಿದ್ದಾರೆ.
12 ವರ್ಷಗಳ ಬಳಿಕ ಮತ್ತೆ ಕೆಎಸ್ಸಿಎಗೆ ವೆಂಕಟೇಶ್: ಈ ಹಿಂದೆ 2010ರಿಂದ 2013ರ ವರೆಗೆ ಕೆಎಸ್ಸಿಎ ಉಪಾಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಸೇವೆ ಸಲ್ಲಿಸಿದ್ದರು. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ 12 ವರ್ಷಗಳ ಬಳಿಕ ಮತ್ತೆ ಕೆಎಸ್ಸಿಎಗೆ ವಾಪಸ್ಸಾಗಿದ್ದಾರೆ. 1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಟೇಶ್ ಪ್ರಸಾದ್, ಟೀಂ ಇಂಡಿಯಾದ ಯಶಸ್ವಿ ಬೌಲರ್, ಕನ್ನಡ ಕಾಮೆಂಟರ್, ಕೋಚ್ ಆಗಿ ಗುರುತಿಸಿಕೊಂಡಿದ್ದಾರೆ.
Advertisement