

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ನಿರ್ಣಾಯಕ ಘಟ್ಟ ತಲುಪಿರುವಂತೆಯೇ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಉಪ ನಾಯಕ ಶುಭ್ ಮನ್ ಗಿಲ್ ಮತ್ತೆ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆದರೆ ಈ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಿದ್ದಿದ್ದು, ತಂಡದ ಉಪನಾಯಕ ಶುಭ್ಮನ್ ಗಿಲ್ ಟಿ20 ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.
ಶುಭ್ಮನ್ ಗಿಲ್ ಕಾಲಿನ ಗಾಯಕ್ಕೆ ತುತ್ತಾಗಿದ್ದು, ಇದೇ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.
ನಾಲ್ಕನೇ ಟಿ20 ಪಂದ್ಯ ನಡೆಯುವ ಹಿಂದಿನ ದಿನದ ಅಭ್ಯಾಸದ ವೇಳೆ ಶುಭ್ಮನ್ ಗಿಲ್ ಗಾಯಕ್ಕೆ ತುತ್ತಾಗಿದ್ದು, ಈ ಕಾರಣದಿಂದಾಗಿ ಅವರು ಹೊರಗುಳಿದಿದ್ದಾರೆ.
ಜೈಸ್ವಾಲ್ ಗೂ ಗಾಯ
ಇನ್ನು ಗಿಲ್ ಮಾತ್ರವಲ್ಲದೇ ತಂಡದ ಮತ್ತೋರ್ವ ಸ್ಟಾರ್ ಆಟಗಾರ ಯಶಸ್ವಿ ಜೈಸ್ವಾಲ್ ಕೂಡ ಗಾಯದ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಆಡುತ್ತಿರುವ ಜೈಸ್ವಾಲ್, ಪಂದ್ಯದ ನಂತರ ತೀವ್ರ ಅಸ್ವಸ್ತರಾಗಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.
ವಿಶ್ರಾಂತಿಗೆ ಸೂಚಿಸಿದ ವೈದ್ಯರು
ಪಂದ್ಯದ ಸಮಯದಲ್ಲಿ ಜೈಸ್ವಾಲ್ಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪಂದ್ಯ ಮುಗಿದ ನಂತರ ಅದು ಇನ್ನಷ್ಟು ಜಾಸ್ತಿಯಾಗಿದೆ. ಹೀಗಾಗಿ ಜೈಸ್ವಾಲ್ ಅವರನ್ನು ತಕ್ಷಣ ಪಿಂಪ್ರಿ ಚಿಂಚ್ವಾಡ್ನ ಆದಿತ್ಯ ಬಿರ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆಸ್ಪತ್ರೆಯಲ್ಲಿ ಜೈಸ್ವಾಲ್ಗೆ ಸಿಟಿ ಸ್ಕ್ಯಾನ್ ಮತ್ತು ಅಲ್ಟ್ರಾಸೌಂಡ್ ಮಾಡಲಾಗಿದ್ದು, ವೈದ್ಯರು ಅವರಿಗೆ ಸಾಕಷ್ಟು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಜೈಸ್ವಾಲ್ ಅವರಿಗೆ ಸದ್ಯಕ್ಕೆ ಕ್ರಿಕೆಟ್ ಆಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.
Advertisement