ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: 'RCB ವಿರುದ್ಧ ಮೊಕದ್ದಮೆ ಹೂಡಬೇಕು'; ಭಾರತದ ಮಾಜಿ ಕ್ರಿಕೆಟಿಗ ಟೀಕೆ

ಘಟನೆ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ
Updated on

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 11 ಜನರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಕಳಪೆ ಯೋಜನೆ ಮತ್ತು ಜನಸಂದಣಿಯ ನಿರ್ವಹಣೆಯೇ ಕಾರಣ ಎಂದು ಭಾರತದ ಮಾಜಿ ಕ್ರಿಕೆಟಿಗ ಮದನ್ ಲಾಲ್ ಟೀಕಿಸಿದ್ದಾರೆ.

ಜೂನ್ 3 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಅನ್ನು ಮಣಿಸಿ ಆರ್‌ಸಿಬಿ ಮೊದಲ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಬುಧವಾರ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಿತ್ತು. ಹೀಗಾಗಿ, ಸಾವಿರಾರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದರು.

ಜನಸಂದಣಿ ಹೆಚ್ಚಾದಂತೆ ಪರಿಸ್ಥಿತಿ ನಿಯಂತ್ರಿಸಲು ಕಷ್ಟವಾಯಿತು. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದು ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಯಿತು. ಇದರ ಪರಿಣಾಮವಾಗಿ ಉಂಟಾದ ಕಾಲ್ತುಳಿತದಲ್ಲಿ ಏಳು ಜನರು ಸಾವಿಗೀಡಾದರು. ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆ ಮತ್ತು ವೈದೇಹಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಲಾಯಿತು.

'ಜನರು ಈ ಘಟನೆ ಅಥವಾ ವಿರಾಟ್ ಕೊಹ್ಲಿಯನ್ನು ಮರೆಯುವುದಿಲ್ಲ. ಹೊರಗೆ ಜನರು ಸಾಯುತ್ತಿದ್ದರೆ, ಒಳಗೆ ಸಂಭ್ರಮಾಚರಣೆ ನಡೆಯುತ್ತಿತ್ತು. ಇದು ನಿಜಕ್ಕೂ ಆಘಾತಕಾರಿ ಮತ್ತು ನಿರಾಶಾದಾಯಕ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಆರ್‌ಸಿಬಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ₹100 ಕೋಟಿ ರೂಪಾಯಿಗೆ ಮೊಕದ್ದಮೆ ಹೂಡಲು ಯೋಚಿಸಬೇಕು... ಬಿಸಿಸಿಐ ಕೂಡ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ' ಎಂದು ಭಾರತದ ಮಾಜಿ ಕ್ರಿಕೆಟಿಗ ಮದನ್ ಲಾಲ್ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ
Bengaluru Stampede: ಕಾಲ್ತುಳಿತ ಪ್ರಕರಣದ ತನಿಖೆಗೆ ಮ್ಯಾಜಿಸ್ಟ್ರೇಟ್ ನೇಮಕ

ಘಟನೆ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.

'ನಾವು 5,000 ಪೊಲೀಸ್ ಸಿಬ್ಬಂದಿಯನ್ನು ವ್ಯವಸ್ಥೆ ಮಾಡಿದ್ದೇವೆ. ಇಷ್ಟು ಯುವ, ಉತ್ಸಾಹಭರಿತ ಜನಸಮೂಹದ ಮೇಲೆ ಬಲಪ್ರಯೋಗ ಮಾಡಲು ನಮಗೆ ಸಾಧ್ಯವಾಗಲಿಲ್ಲ' ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವ್ಯವಸ್ಥೆಗಳನ್ನು ಸಮರ್ಥಿಸಿಕೊಂಡರು.

ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಕರ್ನಾಟಕ ಸರ್ಕಾರವು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದವರೆಗಿನ ವಿಜಯೋತ್ಸವ ಮೆರವಣಿಗೆಯನ್ನು ರದ್ದುಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com