IPL 2025: RCB Vs CSK ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನಲ್ಲಿ ಇಂದು ಮಳೆ ಭೀತಿ; ಹವಾಮಾನ ತಜ್ಞರು ಹೇಳಿದ್ದು ಹೀಗೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಇಂದು ಮಹತ್ವದ ದಿನವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಅಭಿಮಾನಿಗಳು ಪಂದ್ಯ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾತ್ರಿ 7:30ಕ್ಕೆ ನಿಗದಿಯಾಗಿರುವ ಬಹು ನಿರೀಕ್ಷಿತ ಹಣಾಹಣಿಗೆ ಮಳೆ ಅಡ್ಡಿಪಡಿಸುವ ಭೀತಿ ಎದುರಾಗಿದೆ.
ಈ ಕುರಿತು ಸುದ್ದಿಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿರುವ ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಕೇಂದ್ರದ ನಿರ್ದೇಶಕ ಎನ್ ಪುವಿಯರಸು, ಇಂದು ಸಂಜೆ ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಖಚಿತಪಡಿಸಿದ್ದಾರೆ.
ಬೆಂಗಳೂರು ಮಾತ್ರವಲ್ಲದೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದಾವಣಗೆರೆ, ವಿಜಯನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿ ಸಹಿತ (4050 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಪುವಿಯರಸು ತಿಳಿಸಿದ್ದಾರೆ.
ಈ ಮಧ್ಯೆ ಗದಗ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಶನಿವಾರ ಶುಷ್ಕ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆರ್ ಸಿಬಿ ಹಾಗೂ ಸಿಎಸ್ ಕೆ ಚೆನ್ನೈನಲ್ಲಿ ಮುಖಾಮುಖಿಯಾದಾಗ, ಆರ್ಸಿಬಿ 50 ರನ್ಗಳಿಂದ ಗೆಲುವು ಸಾಧಿಸಿತ್ತು. CSK ಈಗಾಗಲೇ ಪ್ಲೇ ಆಫ್ ರೇಸ್ ನಿಂದ ಹಿಂದೆ ಸರಿದಿದ್ದು, ಒಂದು ವೇಳೆ ಮಳೆ ಬಂದೂ ಪಂದ್ಯ ರದ್ದುಗೊಂಡರೆ ಎರಡು ತಂಡಗಳಿಗೂ ತಲಾ ಒಂದೊಂದು ಅಂಕ ದೊರೆಯಲಿದೆ. ಆರ್ ಸಿಬಿ ಪ್ಲೇ ಆಫ್ ಹಾದಿ ಸುಗಮವಾಗಿದೆ.

