

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.
ಹೌದು.. ಕಳೆದ ವರ್ಷದ ಐಪಿಎಲ್ ಟೂರ್ನಿ ಪ್ರಶಸ್ತಿ ಗೆಲುವಿನ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದ ಬಳಿಕ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆ ಸ್ಥಗಿತವಾಗಿತ್ತು.
ಹೀಗಾಗಿ ಐಪಿಎಲ್ ನಲ್ಲಿ ಆರ್ ಸಿಬಿಯ ತವರು ಮೈದಾನಕ್ಕಾಗಿ ವ್ಯಾಪಕ ಶೋಧ ನಡೆದಿತ್ತು. ಆದರೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನ ಸತತ ಪರಿಶ್ರಮದ ಫಲವಾಗಿ ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಐಪಿಎಲ್ ಪಂದ್ಯಗಳ ನಡೆಸಲು ಕರ್ನಾಟಕ ಸರ್ಕಾರ ಷರತ್ತುಬದ್ದ ಅನುಮತಿ ನೀಡಿದೆ ಎಂದು ವರದಿಯಾಗಿದೆ.
ಇಂದು ನಡೆದ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.
ರಾಮಲಿಂಗಾರೆಡ್ಡಿ ಮಾತು
"ಕುನ್ಹಾ ವರದಿಯ ಪ್ರಕಾರ ಕೆಲವು ಷರತ್ತುಗಳಿಗೆ ಸಂಪುಟ ಒಪ್ಪಿಗೆ ನೀಡಿದೆ. ಅವರು ವರದಿಯಲ್ಲಿ ಕೆಲವು ಷರತ್ತುಗಳನ್ನು ಉಲ್ಲೇಖಿಸಿದ್ದರು, ಗರಿಷ್ಠ 35,000 ಜನರು ಮತ್ತು ಇತರ ಕೆಲವು ಷರತ್ತುಗಳನ್ನು ಉಲ್ಲೇಖಿಸಿದ್ದರು. ಅದರಂತೆ, ನಾವು ನಿರ್ಧಾರ ತೆಗೆದುಕೊಂಡಿದ್ದೇವೆ" ಎಂದು ಕರ್ನಾಟಕದ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಇದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಹೀಗಾಗಿ ಆರ್ ಸಿಬಿ ಫ್ರಾಂಚೈಸಿ ತನ್ನ ತವರು ಪಂದ್ಯಗಳಿಗಾಗಿ ಮುಂಬೈ, ಪುಣೆ ಮೈದಾನಗಳನ್ನು ಸಂಪರ್ಕಿಸಿತ್ತು.
ಆದರೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಇದಕ್ಕೆ ಒಪ್ಪಿರಲಿಲ್ಲ. ಇದರ ನಡುವೆ ಆರ್ ಸಿಬಿ ತವರು ಮೈದಾನವಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವನ್ನೇ ಆಯ್ಕೆ ಮಾಡುವಂತೆ ಒತ್ತಡ ಹೇರುತ್ತಿದ್ದರು.
ಇದೇ ಕಾರಣ ಆರ್ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ನಡೆದಿತ್ತು. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ದೊರೆತಿದೆ. ಆರ್ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.
ಇಂದು ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದರಂತೆ ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತಿನೊಂದಿಗೆ ಸರ್ಕಾರ ಈ ಒಪ್ಪಿಗೆ ನೀಡಿದೆ.
ಪರಮೇಶ್ವರ ನೇತೃತ್ವದಲ್ಲಿ ಸಭೆ
ಕ್ಯಾಬಿನೆಟ್ ಸಭೆಗೂ ಮೊದಲು ವಿಧಾನಸೌಧದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ನೇತೃತ್ವದ ಕಮಿಟಿ, ಕೆಎಸ್ಸಿಎ, ಆರ್ಸಿಬಿ ಮಂಡಳಿ ಸದಸ್ಯರು ಭಾಗಿಯಾಗಿದ್ದರು.
ಗೃಹ ಇಲಾಖೆ ಕಮಿಟಿ ಸಿದ್ಧಪಡಿಸಿರುವ ವರದಿಯ ಆಧಾರದ ಮೇಲೆ ಪಂದ್ಯ ಆಯೋಜನೆ ಮಾಡಲು ನಿರ್ಧಾರ ಮಾಡಲಾಗಿದೆ. ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗ ಕೆಎಸ್ಸಿಎ ಈಗ ಮುಂದಾಗಿದೆ.
ಅಂಬುಲೆನ್ಸ್ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ.
ಅಂದಹಾಗೆ ಈ ಬಾರಿಯ ಐಪಿಎಲ್ ಮಾರ್ಚ್ 21 ರಂದು ಪ್ರಾರಂಭವಾಗುವ ಸಾಧ್ಯತೆ ಇದ್ದು, ಫೆಬ್ರವರಿ ಕೊನೆಯಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
Advertisement