ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗಷ್ಟೇ ತಾತ್ವಿಕ ಒಪ್ಪಿಗೆ, ಸಂಭ್ರಮಾಚರಣೆಗೆ ಬ್ರೇಕ್?: ಪರಮೇಶ್ವರ ಹೇಳಿದ್ದೇನು?

ಕೆಎಸ್‌ಸಿಎ ಪಂದ್ಯಗಳಿಗೂ ಮುನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವು ಶಿಫಾರಸು ಮಾಡಿದ ಸುರಕ್ಷತೆ ಮತ್ತು ಭದ್ರತಾ ಅಗತ್ಯಗಳನ್ನು ಅನುಸರಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
G Parameshwara
ಗೃಹ ಸಚಿವ ಜಿ ಪರಮೇಶ್ವರ
Updated on

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಭವಿಷ್ಯದಲ್ಲಿ ಆ ಸ್ಥಳದಲ್ಲಿ ಆಚರಣೆಗೆ ಅವಕಾಶ ನೀಡುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪಂದ್ಯಗಳಿಗೂ ಮುನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವು ಶಿಫಾರಸು ಮಾಡಿದ ಸುರಕ್ಷತೆ ಮತ್ತು ಭದ್ರತಾ ಅಗತ್ಯಗಳನ್ನು ಅನುಸರಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.

ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಷರತ್ತುಬದ್ಧ ಅನುಮೋದನೆ ನೀಡಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಕಳೆದ ವರ್ಷ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ನಂತರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ನಂತರ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲು ಅವಕಾಶ ನಿರಾಕರಿಸಲಾಗಿತ್ತು.

ಈ ಘಟನೆಯ ತನಿಖೆಗಾಗಿ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗವನ್ನು ರಚಿಸಲಾಯಿತು.

'ನಾವು ಅವರಿಗೆ (ಕೆಎಸ್‌ಸಿಎ) ತಾತ್ವಿಕ ಒಪ್ಪಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ನ್ಯಾಯಮೂರ್ತಿ ಕುನ್ಹಾ ಆಯೋಗದ ಶಿಫಾರಸುಗಳನ್ನು ಅವರು ಅನುಸರಿಸಬೇಕು ಎಂದು ಅವರಿಗೆ ಮೊದಲೇ ತಿಳಿಸಲಾಗಿದೆ. ಮೂರು ಅಂಶಗಳಿವೆ. ತಕ್ಷಣದ ಕ್ರಮಗಳು, ಅಲ್ಪಾವಧಿಯ ಕ್ರಮಗಳನ್ನು ಪಂದ್ಯಗಳಿಗೆ ಮುಂಚಿತವಾಗಿಯೇ ಜಾರಿಗೆ ಬರಲಿವೆ ಮತ್ತು ದೀರ್ಘಾವಧಿಯ ಮೂಲಸೌಕರ್ಯ ನವೀಕರಣಗಳು, ಸಮಯ ತೆಗೆದುಕೊಳ್ಳುತ್ತದೆ' ಎಂದು ಪರಮೇಶ್ವರ ಹೇಳಿದರು.

G Parameshwara
RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂದ್ಯಕ್ಕೂ ಮುನ್ನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಎಸ್‌ಸಿಎಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಾನು ಬೃಹತ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತ ಮಹೇಶ್ವರ ರಾವ್ ಅವರ ನೇತೃತ್ವದಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮತ್ತು ಅಗ್ನಿಶಾಮಕ, ಆರೋಗ್ಯ ಮತ್ತು ಪಿಡಬ್ಲ್ಯುಡಿ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಸಹ ರಚಿಸಿದ್ದೇನೆ. ಅವರು ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ ಎಂದರು.

'ನಾವು ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಸಿಬ್ಬಂದಿಯನ್ನು ನಿಯೋಜಿಸುತ್ತೇವೆ. ಇದು ನಾಲ್ಕು ಪಟ್ಟು ಹೆಚ್ಚಿರುತ್ತದೆ. ಕೆಎಸ್‌ಸಿಎಗೆ ಸೂಚಿಸಿರುವ ಕ್ರಮಗಳು ನ್ಯಾಯಮೂರ್ತಿ ಕುನ್ಹಾ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿವೆ. ಹೊರತು ನಾವು ಹೊಸದೇನನ್ನು ಮಾಡುತ್ತಿಲ್ಲ. ಸುರಕ್ಷತೆ 'ಅತ್ಯಂತ ಮುಖ್ಯವಾಗಿದೆ' ಮತ್ತು ಅದಕ್ಕೆ ಅನುಗುಣವಾಗಿ ಸೂಚನೆಗಳನ್ನು ನೀಡಲಾಗುತ್ತಿದೆ' ಎಂದು ಅವರು ಹೇಳಿದರು.

ಕಳೆದ 50 ವರ್ಷಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಸಂದರ್ಭದಲ್ಲಿ ಯಾವುದೇ ಘಟನೆಗಳು ಸಂಭವಿಸಿಲ್ಲ. ಆದರೆ, ಕಳೆದ ವರ್ಷ ಕಾಲ್ತುಳಿತವು ಸಂಭ್ರಮಾಚರಣೆಯ ಸಮಯದಲ್ಲಿ ಸಂಭವಿಸಿದೆ. ಹೀಗಾಗಿ, ಭವಿಷ್ಯದಲ್ಲಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಬೇಕೆ ಬೇಡವೇ ಎಂಬುದನ್ನು ನಂತರ ನಾವು ನಿರ್ಧರಿಸುತ್ತೇವೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com