

ನವದೆಹಲಿ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಯಿಂದ ಅಂತಾರಾಷ್ಟ್ರೀಯ ವಾಯುಪ್ರದೇಶ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಭಾರತದಲ್ಲಿಯೇ ಸಿಲುಕಿದೆ. ಆಟಗಾರರ ಸುರಕ್ಷಿತ ಪ್ರಯಾಣ ಖಚಿತಪಡಿಸಿಕೊಳ್ಳಲು ICC ಮತ್ತು ಸಂಬಂಧಿತ ಸರ್ಕಾರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರತವಾಗಿರುವುದಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ಹೇಳಿದೆ.
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾನಿ ವರದಿ ಹಿನ್ನೆಲೆಯಲ್ಲಿ ಗಲ್ಫ್ ಪ್ರದೇಶದಲ್ಲಿ ಸದ್ಯ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದು ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ.
ಅಂತಾರಾಷ್ಟ್ರೀಯ ವಾಯುಪ್ರದೇಶ ಬಂದ್ ಹಿನ್ನೆಲೆಯಲ್ಲಿ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಂದ ಹೊರಬಿದ್ದ ಬಳಿಕ ವೆಸ್ಟ್ ಇಂಡೀಸ್ ತಂಡ ಭಾರತದಿಂದ ತೆರಳುವುದು ವಿಳಂಬವಾಗಿದೆ ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಹೇಳಿಕೆಯಲ್ಲಿ ತಿಳಿಸಿದೆ.
ಗಲ್ಫ್ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಯ ಪರಿಣಾಮವಾಗಿ ಈ ವಾಯುಪ್ರದೇಶ ಬಂದ್ ಮಾಡಲಾಗಿದೆ. ಇದು ಹಲವು ಅಂತಾರಾಷ್ಟ್ರೀಯ ವಿಮಾನ ಮಾರ್ಗಗಳ ಮೇಲೆ ಪರಿಣಾಮ ಬೀರಿದೆ. ಕೋಲ್ಕತ್ತಾದಲ್ಲಿ ನಡೆದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಭಾರತದ ವಿರುದ್ಧ ವೆಸ್ಟ್ ಇಂಡೀಸ್ ಸೋತಿತ್ತು.
ವೆಸ್ಟ್ ಇಂಡೀಸ್ ಅಲ್ಲದೇ ಜಿಂಬಾಬ್ವೆ ತಂಡದ ಆಟಗಾರರು ಕೂಡಾ ಭಾರತದಲ್ಲಿಯೇ ಸಿಲುಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಜಿಂಬಾಬ್ವೆ ಕ್ರಿಕೆಟ್, ದುಬೈ ಮೂಲಕ ಸ್ವದೇಶಕ್ಕೆ ವಾಪಸ್ಸಾಗಬೇಕಾಗಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಪ್ರಯಾಣ ಯೋಜನೆ ಮೇಲೆ ಪರಿಣಾಮ ಬೀರಿದೆ. ತಂಡ ದೆಹಲಿಯಲ್ಲಿ ಉಳಿದಿರುವುದಾಗಿ ತಿಳಿಸಿದೆ.
ಪರ್ಯಾಯ ಪ್ರಯಾಣ ವ್ಯವಸ್ಥೆಗಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳೊಂದಿಗೆ ಐಸಿಸಿ ಮಾತುಕತೆಯಲ್ಲಿ ನಿರತವಾಗಿರುವುದಾಗಿ ವರದಿಗಳು ತಿಳಿಸಿವೆ.
Advertisement