

ನವದೆಹಲಿ: ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಬಾಕಿ ಅನುದಾನ ನೀಡುವಂತೆ ಕರ್ನಾಟಕ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ ಅಪ್ಪಾಜಿ ನಾಡಗೌಡ ಕೇಂದ್ರ ಕೃಷಿ ಸಚಿವ ರಾಧ ಮೋಹನ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.
ತೋಟಗಾರಿಕೆ ವಿಶ್ವವಿದ್ಯಾಲಯವು 2008ರಲ್ಲಿ ಪ್ರಾರಂಭಗೊಂಡಿದ್ದು, ತೋಟಗಾರಿಕೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಕೇಂದ್ರ ಸರ್ಕಾರವು ವಿಶೇಷ ಅನುದಾನ ನೀಡಿ ವಿಶ್ವವಿದ್ಯಾಲಯವನ್ನು ಉತ್ತೇಜಿಸಬೇಕು.
ವಿಶ್ವವಿದ್ಯಾಲಯದ ಅಭಿವೃದ್ಧಿ, ಹೆಚ್ಚಿನ ಸಂಶೋಧನೆ ಹಾಗೂ ಶಿಕ್ಷಣ ನೀಡಲು ಅನುಕೂಲವಾಗುವಂತೆ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಕೋರಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ವಿಶೇಷ ಘಟಕ ಯೋಜನೆಯಡಿ(ಎಸ್ಎಫ್ಸಿ) ರೂ.35 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ಈ ಯೋಜನೆಯಡಿ 2011-12ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯಕ್ಕೆ ರೂ.50 ಕೋಟಿ ಮಂಜೂರು ಮಾಡಿದೆ. ಆದರೆ ಕೇವಲ ರೂ.15 ಕೋಟಿ ಬಿಡುಗಡೆ ಮಾಡಿದೆ.
ಉಳಿದ ರೂ.35 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ನೆರವಾಗುವಂತೆ ಕೃಷಿಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದ್ದಾರೆ.