ಬೆಂಗಳೂರು: ಕಾವೆಲ್ ಬೈರಸಂದ್ರದಲ್ಲಿರುವ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಶಿಕ್ಷಕನೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಶಾಲೆಯಲ್ಲಿ ಎಲ್ಲ ವಿಷಯಗಳ ಬಗ್ಗೆ ಮಕ್ಕಳಿಗೆ ಪಾಠ ಮಾಡುತ್ತಿದ್ದ ಶಿಕ್ಷಕ ದೇವರಾಜ್(57)ನನ್ನು ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
14 ವರ್ಷದ ಬಾಲಕಿಗೆ ಕಳೆದ ವರ್ಷ ದೇವರಾಜ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಆದರೆ, ಬಾಲಕಿ ಘಟನೆ ಬಗ್ಗೆ ಪಾಲಕರಿಗಾಗಲಿ, ಶಾಲೆಯ ಮುಖ್ಯ ಶಿಕ್ಷಕರ ಬಳಿಯಾಗಲಿ ಹೇಳಿಕೊಂಡಿರಲಿಲ್ಲ.
ವಿಬ್ಗ್ಯೋರ್, ಆರ್ಕಿಡ್ಸ್, ಕೇಂಬ್ರಿಡ್ಜ್ ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ನಗರದ ನಾನಾ ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯಗಳ ಬಗ್ಗೆ ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
ಅದೇ ರೀತಿ ಕಾವಲ್ಬೈರಸಂದ್ರದ ಶಾಲೆಯಲ್ಲಿ ಅ.31ರಂದು ಜಾಗೃತಿ ಕಾರ್ಯಕ್ರಮ ನಡೆದಿತ್ತು.
ಈ ವೇಳೆ ಗುಡ್ಟಚ್, ಬ್ಯಾಡ್ ಟಚ್ ಸೇರಿದಂತೆ ಲೈಂಗಿಕ ದೌರ್ಜನ್ಯಗಳ ವಿವರಣೆ ನೀಡಲಾಗಿತ್ತು.
ಜಾಗೃತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಳೆದ ವರ್ಷ ಶಿಕ್ಷಕ ದೇವರಾಜ್ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬಾಲಕಿಗೆ ಅರಿವಾಗಿ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ.
ಮುಖ್ಯ ಶಿಕ್ಷಕರು ಡಿ.ಜೆ.ಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದರು. ಬಾಲಕಿಯಿಂದ ಮಾಹಿತಿ ಸಂಗ್ರಹಿಸಿದ ಪೊಲೀಸರು ಆರೋಪಿ ಶಿಕ್ಷಕ ದೇವರಾಜ್ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
Advertisement