ರಾಘವೇಶ್ವರ ಶ್ರೀ ಮೇಲಿನ ಅತ್ಯಾಚಾರ ಆರೋಪ: ಶೀಘ್ರವೇ ಚಾರ್ಜ್ ಶೀಟ್

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಆದಷ್ಟು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ.
ರಾಘವೇಶ್ವರ ಶ್ರೀಗಳು
ರಾಘವೇಶ್ವರ ಶ್ರೀಗಳು

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲೆ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಆದಷ್ಟು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಬಗ್ಗೆ ನೊಂದ ಪ್ರೇಮಲತಾ ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿ ದೂರು ಆಲಿಸಲಾಗಿದೆ. ಅಲ್ಲದೇ ಈ ಸಂಬಂಧ ರಾಜ್ಯದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಅವರೊಂದಿಗೆ ಸಭೆ ನಡೆಸಲಾಯಿತು. ಈ ವೇಳೆ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ ಎಂದರು. `ತನಿಖೆ ವಿಳಂಬವಾಗುತ್ತಿರಲು ಕಾರಣ ಕೇಳಿದಾಗ ಅದಕ್ಕೆ ಅಧಿಕಾರಿಗಳು ನಕಾರಾತ್ಮಕ ಉತ್ತರ ನೀಡಿದ್ದಾರೆ.

ಪ್ರತಿ ಪ್ರಕರಣವೂ ವಿಭಿನ್ನವಾಗಿರುತ್ತದೆ. ಅದರದೇ ಆದ ವ್ಯಾಪ್ತಿ, ಆಳ ಇರುತ್ತದೆ. ಹೀಗಾಗಿ, ಎಲ್ಲ ಕೋನಗಳಲ್ಲೂ ತನಿಖೆ ನಡೆಸಬೇಕಿರುವ ಕಾರಣ ಕೆಲವೊಮ್ಮೆ ವಿಳಂಬವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆ ವಿಚಾರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಆಗುವುದಿಲ್ಲ' ಎಂದು ಹೇಳಿದರು. ತನಿಖೆ ಪೂರ್ಣಗೊಳಿಸಲು 90 ದಿನಗಳ ಗಡುವು ಇರುವುದಿಲ್ಲವೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಗಡುವು ಇರುವುದು ನಿಜ. ಆದರೆ ಕೆಲವೊಂದು ಪ್ರಕರಣಗಳಲ್ಲಿ ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ ಎಂದರು.

ಯಾರ ಒತ್ತಡವೂ ಇಲ್ಲ : ಸಿಐಡಿ ಅಧಿಕಾರಿಗಳ ಮೇಲಾಗಲಿ, ಸರ್ಕಾರದ ಮೇಲಾಗಲಿ ಅಥವಾ ರಾಷ್ಟ್ರೀಯ ಮಹಿಳಾ ಆಯೋಗದ ಮೇಲಾಗಲಿ ಯಾವುದೇ ಒತ್ತಡ ಇಲ್ಲ. ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪದ ತನಿಖೆ ಒತ್ತಡರಹಿತವಾಗಿ ನಡೆಯುತ್ತಿದೆ. ಹೀಗಾಗಿ, ತನಿಖೆ ಪೂರ್ಣಗೊಂಡ ಬಳಿಕ ಯಾರದು ತಪ್ಪು, ಯಾವುದು ಸರಿ ಎನ್ನುವುದನ್ನು ನ್ಯಾಯಾಲಯ ನಿರ್ಧರಿಸುತ್ತದೆ ಎಂದು ಲಲಿತಾ ಕುಮಾರ ಮಂಗಳಂ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com