ಬೆಂಗಳೂರು: ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದೇ ಶಿಕ್ಷಣದ ಮುಖ್ಯಗುರಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದರು. ನಗರದ ಬಿಷಪ್ ಕಾಟನ್ ಶಾಲೆಯು ಆರಂಭವಾಗಿ 150 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಎಂದರೆ ಮಾಹಿತಿಯನ್ನು ವಿದ್ಯಾರ್ಥಿಗಳ ಮನಸ್ಸಿಗೆ ತುಂಬುವುದಕ್ಕಿಂತ ಅವರನ್ನು ರೂಪಿಸುವುದೇ ಆಗಿದೆ ಎಂದು ತಿಳಿಸಿದರು.
ಶಿಕ್ಷಣ ನಾಗರಿಕತೆಯ ಹಾದಿಯಲ್ಲಿ ನಂಬಿಕೆ ಮತ್ತು ವಿಶ್ವಾಸವನ್ನು ವಿದ್ಯಾರ್ಥಿಗಳಲ್ಲಿ ತುಂಬಬೇಕು. ಮೌಢ್ಯ ಹಾಗೂ ಮೂಢನಂಬಿಕೆಗಳನ್ನು ತೊಡೆದು ಹಾಕಿ ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಲು ಶಿಕ್ಷಣ ಚುಚ್ಚುಮದ್ದಿನಂತೆ ಕಾರ್ಯ ನಿರ್ವಹಿಸಬೇಕು. ದೇಶ ಏಕತೆ ಮತ್ತು ವೈಜ್ಞಾನಿಕ ಪರಿಭಾಷೆಯಲ್ಲೇ ಮುಂದುವರಿಯಬೇಕು. ಅದಕ್ಕೆ ಪೂರಕವಾದ ಶಿಕ್ಷಣ ವ್ಯವಸ್ಥೆ ಬೇಕಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ ನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲ ವಜುಭಾಯï ರೂಢಾಬಾಯ್ ವಾಲಾ, ದೇಶದ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆಯನ್ನು ಸಾಮಾನ್ಯ ಜನರಿಗೆ ತಲುಪಿಸಲು ಕ್ರೈಸ್ತ ಧಾರ್ಮಿಕ ಸಂಸ್ಥೆಗಳು ಉತ್ತಮ ಕೆಲಸ ಮಾಡಿವೆ ಎಂದು ಶ್ಲಾಘಿಘಿಸಿದರು. ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್
ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Advertisement