ಬೆಂಗಳೂರು: ರಾಜ್ಯದಲ್ಲಿ ಹೆಚ್1ಎನ್1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಮುಖವಾಗಿ ಮಹಾನಗರಿ ಬೆಂಗಳೂರಿನಲ್ಲಿ ಸೋಂಕು ಹೆಚ್ಚು ವೇಗವಾಗಿ ಹರಡುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 75 ಜನರಿಗೆ ಸೋಂಕು ತಗುಲಿದೆ. ಅಲ್ಲದೆ ಈವರೆಗೂ ರಾಜ್ಯದ 144 ಮಂದಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಸಾಂಕ್ರಾಮಿಕ ರೋಗವಾಗಿರುವ ಹೆಚ್1ಎನ್1 ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಇಲ್ಲದಿರುವುದು ರೋಗದ ತೀವ್ರತೆ ಹೆಚ್ಚಾಗಲು ಪ್ರಮುಖ ಕಾರಣ ಎಂದು ವೈಧ್ಯರು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಇಲಾಖೆ ಅಂಕಿ-ಅಂಶಗಳ ಪ್ರಕಾರ, ಬೆಂಗಳೂರಲ್ಲೇ ಸುಮಾರು 25ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಉಡುಪಿ ಜಿಲ್ಲೆಯಲ್ಲಿ 7 ಮಂದಿ, ತುಮಕೂರಿನಲ್ಲಿ 7, ಚಿಕ್ಕಮಗಳೂರು, ದಾವಣಗೆರೆಯಲ್ಲಿ ತಲಾ 4, ಚಿತ್ರದುರ್ಗದಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ನಿನ್ನೆಯಿಂದೀಚೆಗೆ ಇನ್ನೂ ಇಬ್ಬರು ಸೋಂಕಿಗೆ ಬಲಿಯಾಗಿರುವ ವರದಿ ದೃಢಪಟ್ಟಿದ್ದು, ಬಿಬಿಎಂಪಿ ಕಾಲ್ಸೆಂಟರ್ಗೆ ಪ್ರತಿನಿತ್ಯ 15 ರಿಂದ 20 ಪ್ರಕರಣಗಳು ವರದಿಯಾಗುತ್ತಲೇ ಇವೆ. ರಾಜ್ಯಾದ್ಯಂತ ಹೊಸದಾಗಿ 25 ಮಂದಿಗೆ ಸೋಂಕಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Advertisement