ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆಲ ಪಶುವೈದ್ಯ ಆಸ್ಪತ್ರೆಗಳನ್ನು ಗ್ರಾಮೀಣ ಭಾಗಕ್ಕೆ ಸ್ಥಳಾಂತರಕ್ಕೆ ತೀರ್ಮಾನಿಸಿದ ಸರ್ಕಾರದ ನಿಲುವಿಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ನಗರ ಭಾಗದಲ್ಲಿ ಅಗತ್ಯವಿರುವ ಜಾನುವಾರುಗಳಿಗೆ ಸಂಚಾರಿ ವಾಹನ ವ್ಯವಸ್ಥೆಯ ಮೂಲಕ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ಹೈಕೋರ್ಟ್ಗೆ ತಿಳಿಸಿದ ಹಿನ್ನೆಲೆಯಲ್ಲಿ ಸ್ಥಳಾಂತರಕ್ಕೆ ಅನುಮತಿ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯ 30 ಪಶುವೈದ್ಯ ಆಸ್ಪತ್ರೆ ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸಲು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಗೋಪಾಲಕರ ಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ 'ನಗದಲ್ಲಿರುವ ಜಾನುವಾರುಗಳಿಗೆ ಅಗತ್ಯವಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಹೆಚ್ಚುವರಿ ಪಶುವೈದ್ಯಕೀಯ ಆಸ್ಪತ್ರೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಸ್ಥಳಾಂತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ಇದೀಗ ನಗರದಲ್ಲಿ ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಲು ಸಂಚಾರಿ ಕೇಂದ್ರ ಪ್ರಾರಂಭಿಸಲಾಗುವುದು.
ಆ ಮೂಲಕ ಮನೆ-ಮನೆಗೆ ಪಶು ವೈದ್ಯಕೀಯ ಸೇವೆ ಕಲ್ಪಿಸಲಾಗುವುದು' ಎಂದು ಪೀಠಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ನಗರದಲ್ಲಿರುವ ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸುವ ವ್ಯವಸ್ಥೆಯನ್ನು ಸರ್ಕಾರ ಮುಂದುವರೆಸಲಿದೆ. ಎಂದು ಭರವಸೆ ವ್ಯಕ್ತಪಡಿಸಿ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ