ಹುಬ್ಬಳ್ಳಿ/ಧಾರವಾಡ: ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ 10 ದಿನದ ಬದಲಿಗೆ 20 ದಿನ ಮಳೆಗಾಲದ ಅಧಿವೇಶನ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಕನಿಷ್ಠ 20 ದಿನಗಳಾದರೂ ಮಳೆಗಾಲ ಅಧಿವೇಶನ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಆದರೆ ಶೆಟ್ಟರ್ ಸಿ.ಎಂ ಆಗಿದ್ದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಏಕೆ ತಿಂಗಳುಗಳ ಕಾಲ ಅಧಿವೇಶನ ನಡೆಸಲಿಲ್ಲ ಎಂದು ಪ್ರಶ್ನಿಸಿದ ಸಿ.ಎಂ, ಇದೀಗ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿಯಲ್ಲಿ 20 ದಿನಗಳಾದರೂ ಅಧಿವೇಶನ ನಡೆ ಸಬೇಕೆಂದು ಒತ್ತಾಯಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೇಳಿದ್ದಾರೆ. ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ 250 ರೂ ಹೆಚ್ಚಿಗೆ ನೀಡುವಂತೆ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಲಾಗಿದೆ ಇದಕ್ಕೆ ಕಾರ್ಖಾನೆ ಮಾಲೀಕರು ಸ್ಪಂದಿಸದಿದ್ದಲ್ಲಿ ಸರ್ಕಾರವೇ ಸಕ್ಕರೆ ಮಾರಾಟ ಮಾಡಿ ಇತರಿಗೆ ಹೆಚ್ಚುವರಿ ರೂ.250 ನೀಡಲಿದೆ ಎಂದು ಸಿ.ಎಂ ತಿಳಿಸಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ನಡೆದಿರುವ ಅಕ್ರಮ ಮರಳುಗಾರಿಕೆ ಕುರಿತು ಲೋಕಾಯುಕ್ತ ತನಿಖೆಯ ವರದಿಯೊಂದಿಗೆ ಇಲಾಖಾವಾರು ತನಿಖೆ ನಡೆಸುತ್ತಿರುವುದು ಲೋಕಾಯುಕ್ತ ದುರ್ಬಲಗೊಳಿಸಲು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸುದ್ದಿಗಾರರು ಪ್ರಶ್ನೆ ಕೇಳುವ ಮುನ್ನವೇ ಮುಖ್ಯಮಂತ್ರಿಗಳು ದೌಡಾಯಿಸಿದ್ದು ವಿಶೇಷವಾಗಿತ್ತು.
ಅಧಿವೇಶನಕ್ಕೆ ಮುತ್ತಿಗೆ: ಕೋಡಿಹಳ್ಳಿ
ಕಾರ್ಖಾನೆ ಮಾಲೀಕರಿಂದ ಕಬ್ಬು ಬೆಳೆಗಾರರಿಗೆ ಬಾಕಿ ಹಣ ಕೊಡಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, 29 ರಿಂದ ಆರಂಭವಾಗುವ ಬೆಳಗಾವಿ ಅಧಿವೇಶನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement