ಬೆಂಗಳೂರು: ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಮೂಲ ಭೂಗಳ್ಳರನ್ನು ಪತ್ತೆ ಮಾಡಿ, ಭೂಗಳ್ಳರಿಗೆ ಸಹಕರಿಸಿದ ಅಧಿಕಾರಿ ಹಾಗೂ ನೌಕರರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು
ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಆಗ್ರಹಿಸಿದ್ದಾರೆ.
ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿಯ ನಾಯಕತ್ವ ವಹಿಸಿರುವ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ವಿಧಾನಸಭೆ ಮಾಜಿ ಸ್ಪೀಕರ್ ಕೃಷ್ಣ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿ, ಭೂಕಬಳಿಕೆ ಕುರಿತು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚಿಸಿ 20 ಅಂಶಗಳ ಮನವಿ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಸ್ವಾಮಿ, ಭೂ ಕಬಳಿಕೆಗೆ ಸಂಬಂಧಿಸಿದಂತೆ ಸರ್ಕಾರ ಕ್ರಿಯಾ ಯೋಜನೆ ಮಾಡದೆ ಮನಬಂದಂತೆ ಕಾರ್ಯಾಚರಣೆ ನಡೆಸುವುದು ಸೂಕ್ತವಲ್ಲ. `ಅಮಾಯಕರಿಗೆ ಶಿಕ್ಷೆ ಕಳ್ಳರಿಗೆ ರಕ್ಷಣೆ ಎಂಬಂತೆ ಆಗಬಾರದು.
ಮೂಲ ಭೂಗಳ್ಳರನ್ನು ಪತ್ತೆ ಹಚ್ಚಬೇಕು. ಸರ್ಕಾರದ ಜಮೀನು ಕಬಳಿಕೆ ಮಾಡಿ ನೂರಾರು ಕೋಟಿ ಆಸ್ತಿ ಸಂಪಾದನೆ ಮಾಡಿದವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಮನೆಗಳನ್ನು ಕಳೆದುಕೊಂಡವರಿಗೆ ಆ ಹಣದಿಂದ ಸರ್ಕಾರ ಪರಿಹಾರ ನೀಡಬೇಕು ಎಂದರು.
ಇಂದು ಕೇವಲ ಕೆರೆಗಳು ಮಾತ್ರವಲ್ಲದೇ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್ಡಿಎ), ಅವಿಭಜಿತ ಬೆಂಗಳೂರು ಜಿಲ್ಲೆ, ಬೆಂಗಳೂರು ನಗರ ಮತ್ತು ರಾಮನಗರದ ಸುತ್ತಮುತ್ತ ಸುಮಾರು 5 ಲಕ್ಷ ಎಕರೆ ಸರ್ಕಾರಿ ಭೂಮಿ ಇದ್ದು, ಇಂದು ಸುಮಾರು 1 ಲಕ್ಷ ಕೋಟಿಗೂ ಮೀರಿ ಬೆಲೆ ಬಾಳುವ ಸರ್ಕಾರಿ ಭೂಮಿಗೆ ಭೂಗಳ್ಳರು ಸುಳ್ಳು ದಾಖಲೆ ಸೃಷ್ಟಿಸಿ ನುಂಗಿ ನೀರು ಕುಡಿದಿದ್ದಾರೆ. ಈ ರೀತಿ ಮಾಡಿದವರು ಅಮಾಯಕರಲ್ಲ, ಅವರೆಲ್ಲರೂ ಬಲಾಢ್ಯರು ಮತ್ತು ಪ್ರಭಾವಶಾಲಿಗಳು.
ಅಧಿಕಾರಿಗಳ ಮತ್ತು ನೌಕರ ವರ್ಗದ ಶಾಮೀಲಿನಿಂದಾಗಿ ನೂರಾರು ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಭೂಗಳ್ಳರು ನುಂಗಿ ನೀರು ಕುಡಿದಿದ್ದಾರೆ. ಸರ್ಕಾರ ಒಂದು ಕಾಲಮಿತಿಯೊಳಗೆ ಕಾರ್ಯಕ್ರಮ ರೂಪಿಸಿ ಸರ್ಕಾರ ತನ್ನ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು. ಹಾಗೆಯೇ ಭೂ ಕಬಳಿಕೆ ಮಾಡಿದವರಿಗೆ ಶಿಕ್ಷೆಗೆ ಒಳಪಡಿಸಬೇಕು ಎಂದರು.
ಬೆಂಗಳೂರು ಸುತ್ತಮುತ್ತಲಿನ ಕೆರೆಗೆ ಸಂಬಂಧಿಸಿದಂತೆ ಈ ಹಿಂದೆಯೇ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಕೆರೆಗಳಿಗೆ ಸಂಬಂಧಿಸಿದಂತೆ ವಸ್ತು ಸ್ಥಿತಿ ಮತ್ತು ಕೆರೆಗಳ ರಕ್ಷಣೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ರೂಪಿಸುವಂತೆ ಹೈಕೋರ್ಟ್ ಸಮಿತಿ ರಚನೆ ಮಾಡಿತ್ತು. 2012ರಲ್ಲಿ ತೀರ್ಪು ನೀಡಿ ಸಮಿತಿ ನೀಡಿದ ವರದಿಯಲ್ಲಿನ ಅಂಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುಷ್ಠಾನಗೊಳಿಸುವಂತೆ ಆದೇಶ ನೀಡಿತ್ತು.
ಆ ಪ್ರಕರಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೇ ಮೊದಲನೆಯ ಪ್ರತಿವಾದಿಯಾಗಿದ್ದರು. ಆದರೆ ಮುಖ್ಯ ಕಾರ್ಯದರ್ಶಿಗಳು ಆದೇಶ ಪಾಲಿಸದೆ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇವರು ಆ ಅಕ್ರಮದಲ್ಲಿ ಶಾಮೀಲಾಗಿದ್ದಾರಾ? ರಾಜ್ಯದ ಸಂಪತ್ತನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರ ಹಾಗೂ ಅಧಿಕಾರಿಗಳ ಮೇಲಿದೆ. ಇದನ್ನು ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಯವರು ಇದಕ್ಕೆ ಪ್ರತಿಕ್ರಿಯಿಸಿದ್ದು, ಈಗ ರಾಜ್ಯದಲ್ಲಿ ಗ್ರಾಪಂ ಚುನಾವಣೆ ಘೋಷಣೆಯಾಗಿದೆ.
ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಮಿತಿಯ ಪ್ರಮುಖರನ್ನು ಕರೆಯಿಸಿ, ರಾಜ್ಯಮಟ್ಟದ ಅಧಿಕಾರಿಗಳು ಸೇರಿ ಈ ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುವುದು. ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಮನವಿಯಲ್ಲೇನಿದೆ?
Advertisement