

ಬೆಂಗಳೂರು: ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಗುದ್ದೋಡು ಪ್ರಕರಣಗಳಲ್ಲಿ ಪಾದಚಾರಿಗಳಿಬ್ಬರು ಮೃತಪಟ್ಟಿದ್ದಾರೆ.
ಮಾಗಡಿ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕೃಷ್ಣಪ್ಪ ಮೃತಪಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿ ನಿವಾಸಿಯಾಗಿರುವ ಕೃಷ್ಣಪ್ಪ ಕೂಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ವಿಜಯನಗರ ಸಮೀಪದ ಮಾಗಡಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಆದರೆ, ಚಾಲಕ ಬಸ್ ಸಮೇತ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕೃಷ್ಣಪ್ಪ ಅವರನ್ನು ಸ್ಥಳೀಯರು ವಸಂತನಗರದ ಖಾಸಗಿ ಆಸ್ಪತ್ರಗೆ ದಾಖಲಿಸಿದ್ದರು. ಈ ಬಗ್ಗೆ ಬಿಎಂಟಿಸಿಯಿಂದ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ವಿಜಯನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ ವಾಹನ ಡಿಕ್ಕಿ
ಮತ್ತೊಂದು ಪ್ರಕರಣದಲ್ಲಿ ಮಾಗಡಿ ರಸ್ತೆ ಟಿಬಿ ಆಸ್ಪತ್ರೆ ಸಮೀಪದ ಅಪರಿಚಿತ ವಾಹನ ಡಿಕ್ಕಿ ಹೊಡೆದು 30 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನ ಹೆಸರು ವಿಳಾಸ ತಿಳಿದುಬಂದಿಲ್ಲ. ಭಾನುವಾರ ನಸುಕಿನ 5 ಗಂಟೆ ಸುಮಾರಿಗೆ ರಸ್ತೆ ದಾಟುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಉಪ್ಪಾರಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.
Advertisement