ಬೆಂಗಳೂರು: ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ವಿತರಣೆಯ ಬೆನ್ನಲ್ಲೆ ಪ್ರಶಸ್ತಿಯ ಆಯ್ಕೆ ಕುರಿತಂತೆ ಅಸಮಾಧಾನ ಸ್ಪೋಟಗೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು,ಸಚಿವರ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಯವರಿಗೆ ದೂರಿತ್ತಿದ್ದಾರೆ.
ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ, ಆನೇಕಲ್ ಶಾಸಕ ಶಿವಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯವರನ್ನು ಖುದ್ದು ಭೇಟಿ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗೆ ನಾವು ಸಹ ಕೆಲವು ಅರ್ಹ ವ್ಯಕ್ತಿಗಳ ಹೆಸರನ್ನು ಶಿಫಾರಸು ಮಾಡಿದ್ದೆವು. ಆದರೆ, ನಮ್ಮ ಶಿಫಾರಸನ್ನು ಪರಿಗಣಿಸಿಲ್ಲ ಎಂಬುದು ಈ ಶಾಸಕರ ಆರೋಪ. ಅರ್ಹತೆ ಮೇಲೆ ಆಯ್ಕೆ ಮಾಡಿಕೊಳ್ಳಲಿ, ಆದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಏಕಪಕ್ಷೀಯ ತೀರ್ಮಾನ ಸರಿಯಲ್ಲ ಎಂದು ಹೇಳಿದ್ದಾರೆ.
ಇಷ್ಟೇ ಅಲ್ಲದೇ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ವಹಣೆಯಲ್ಲಿಯೂ ಸಹ ಸಚಿವೆ ವಿಫಲರಾಗಿದ್ದಾರೆ. ಶಾಸಕರ ಮಾತಿಗೆ ಬೆಲೆ ಕೊಡುತ್ತಿಲ್ಲ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮೂವರು ಶಾಸಕರು ಮುಖ್ಯಮಂತ್ರಿಯವರಲ್ಲಿ ಅರಿಕೆ ಮಾಡಿಕೊಂಡರು.
Advertisement