
ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ವಿಮ್ಸ್), ಬೆಂಗಳೂರಿನ ವಾಣಿವಿಲಾಸ, ಮೈಸೂರಿನ ಚೆಲುವಾಂಬ ಸೇರಿದಂತೆ ರಾಜ್ಯದ ಇತರೆ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಹಾಗೂ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಅದರ ನಿಯಂತ್ರಣ ಹಾಗೂ ಅಧ್ಯಯನಕ್ಕಾಗಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಆದಷ್ಟು ಬೇಗ ಸಭೆ ಕರೆದು ರೂಪು ರೇಷೆ ಸಿದ್ದಪಡಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
`ಮಕ್ಕಳು ಹಾಗೂ ಬಾಣಂತಿಯರ ಸಾವಿನ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಸರ್ಕಾರಿ ಹಿರಿಯ ವೈದ್ಯಾಧಿಕಾರಿಗಳು, ಖಾಸಗಿ ವೈದ್ಯರು ಹಾಗೂ ಸರ್ಕಾರೇತರ ಸಂಸ್ಥೆ (ಎನ್ ಜಿಓ) ಒಳಗೊಂಡಂತೆ ಸಮಿತಿ ರಚಿಸಲು ಉದ್ದೇಶಿಸಲಾಗಿದೆ. ಸಮಿತಿ ಪ್ರತಿ ತಿಂಗಳು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಲಿದೆ.
ಆಸ್ಪತ್ರೆಗಳಲ್ಲಿ ಹೆರಿಗೆಗಾಗಿ ಇರುವ ವ್ಯವಸ್ಥೆಗಳು, ಅನಾರೋಗ್ಯಕ್ಕೆ ತುತ್ತಾಗಿರುವ ಮಕ್ಕಳಿಗಾಗಿ ಇರುವ ಎನ್ ಐಸಿಯು (ನವಜಾತ ಶಿಶುಗಳ ತೀವ್ರ ನಿಗಾ ಘಟಕ) ಸೇರಿದಂತೆ ಇತರ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಸೌಲಭ್ಯಗಳ ಕೊರತೆ, ಸಿಬ್ಬಂದಿ ಕೊರತೆ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪಟ್ಟಿ ಮಾಡಲಿದೆ. ಬಳಿಕ ಅದರನ್ನು ಬಗೆಹರಸಲು ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.
Advertisement