ಬೆಂಗಳೂರು: ಕನಿಷ್ಠ 10 ನೇ ತರಗತಿವಾದರೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಲಿ ಎಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಸ್ತಾಪಕ್ಕೆ ರಾಜ್ಯವು ಸಲಹೆ ನೀಡಿದೆ.
ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಈ ಅಭಿಪ್ರಾಯ ಮುಂದಿಟ್ಟರು. ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿ ತರುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಿಂದ ಮೊದಲುಗೊಂಡು ರಾಜ್ಯಮಟ್ಟದ
ವರೆಗೆ ಆಸಕ್ತ ಸಾರ್ವಜನಿಕರೆಲ್ಲರ ಸಭೆಯ, ಅನಿಸಿಕೆ ಮತ್ತು ಚಿಂತನೆಗಳನ್ನು ಸಂಗ್ರಹಿಸಿ ಅವುಗಳ ಆಧಾರದ ಮೇಲೆ ನೀತಿ ರೂಪಿಸುತ್ತಿದೆ. ರಾಜ್ಯದಲ್ಲಿ ಜಿಲ್ಲಾ ಮಟ್ಟದವರೆಗಿನ ಜನ ಸಂಪರ್ಕ ಮತ್ತು ಅಭಿಪ್ರಾಯ ಸಂಗ್ರಹಣಾ ಕಾರ್ಯಗಳು ಬಹುತೇಕ ಮುಕ್ತಾಯಗೊಂಡಿದ್ದು ರಾಜ್ಯಮಟ್ಟದ ಸಮಾಲೋಚನ ಸಭೆ ಶನಿವಾರ ನಡೆಯಿತು.
ಶಿಕ್ಷಣ ಸಚಿವರಾದಿಯಾಗಿ ಪ್ರಾಥಮಿಕ ಪ್ರೌಢಶಿಕ್ಷಣ, ಉನ್ನತ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು, ಕರ್ನಾಟಕ ಜ್ಞಾನ ಆಯೋಗದ ಪ್ರತಿನಿಧಿಗಳು, ರಾಜ್ಯ ಶಿಕ್ಷಣ ನೀತಿ ಟಾಸ್ಕ್ ಫೋರ್ಸ್ ಸದಸ್ಯರು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ,ವಿವಿಧ ಸಮಾಜ ಸೇವಾ ಸಂಸ್ಥೆಗಳ ಸದಸ್ಯರು ವಿಶೇಷ ಆಹ್ವಾನಿತರು, ನಿವೃತ್ಥ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಿದರು. ಈ ವೇಳೆ ಮಾತನಾಡಿದ ಸಚಿವ ಕಿಮ್ಮನೆ ರತ್ನಾಕರ್, ೧ನೇ ತರಗತಿಯಿಂದ 10ನೇ ತರಗತಿ ವರೆಗೆ ಸಾಧ್ಯವಾದರೆ ೧೨ನೇ ತರಗತಿ ವರೆಗೂ ಕಡ್ಡಾಯ ಮತ್ತು ಉಚಿತ ಶಿಕ್ಷಣ ಸಿಗುವಂತಾಗಬೇಕು. ಇದರಿಂದ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲಿದೆ ಎಂದು ಅಭಿಪ್ರಾಯಪಟ್ಟರು.
Advertisement